ನವದೆಹಲಿ, ಜು.21- ಸೋನಿಯಾ ಗಾಂಧಿ ಕಾನೂನಿಗಿಂತ ದೊಡ್ಡವರಾ..? ಕಾನೂನಿಗೂ ಅವರಿಗೂ ಸಂಬಂಧವೇ ಇಲ್ವಾ..? ಹೀಗೆ ಲೋಕಸಭೆಯಲ್ಲಿಂದು ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಷಿ ತೀವ್ರ ವಾಗ್ದಾಳಿ ನಡೆಸಿದರು.
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸುತ್ತಿರುವುದನ್ನು ವಿರೋಧಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಧರಣಿ ನಡೆಸುವ ಮೂಲಕ ಸದನದ ಕಲಾಪಕ್ಕೆ ಅಡ್ಡಿಪಡಿಸಿದರು.
ಕಾಂಗ್ರೆಸ್ ಸದಸ್ಯರು ಹೀಗೆ ಸದನದ ಕಲಾಪಕ್ಕೆ ಅಡ್ಡಿಪಡಿಸುತ್ತಿರುವುದನ್ನು ವಿರೋಧಿಸಿ ಮಾತನಾಡಿದ ಪ್ರಹ್ಲಾದ್ ಜೋಷಿ, ಅಸಲಿಗೆ ಇವರಿಗೆ ಏನು ಬೇಕು? ಈಗ ಸೋನಿಯಾ ಗಾಂಧಿ ಪರ ಪ್ರತಿಭಟಿಸುತ್ತಿರುವವರು ನಿನ್ನೆ ಬೆಲೆ ಏರಿಕೆ ಕುರಿತು ಚರ್ಚೆಗೆ ಒತ್ತಾಯಿಸಿದರು. ಎರಡೂ ಸದನಗಳ ಸಭಾಧ್ಯಕ್ಷರು ಸ್ವತಃ ಚರ್ಚೆಗೆ ಅವಕಾಶ ನೀಡುವುದಾಗಿ ಹಲವು ಬಾರಿ ಭರವಸೆ ನೀಡಿದರು. ಆದರೂ ಪ್ರತಿಪಕ್ಷಗಳು ಸುಗಮವಾಗಿ ಸದನ ನಡೆಸಲು ಸಹಕರಿಸುತ್ತಿಲ್ಲ. ಅವರಿಗೆ ನಿಜವಾಗಿಯೂ ಜನರ ಬಗ್ಗೆ ಕಾಳಜಿ ಇದ್ದರೆ ಅವರು ಚರ್ಚೆಯಲ್ಲಿ ಭಾಗವಹಿಸಬೇಕು ಎಂದರು.
ಕಾನೂನಿನ ಮುಂದೆ ಎಲ್ಲರೂ ಒಂದೇ. ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್ನವರು ಜನಸಾಮಾನ್ಯರಿಗೆ ತೊಂದರೆ ಕೊಡುತ್ತಿರುವುದು ಸರಿಯಲ್ಲ. ಸಂಸತ್ತಿನಲ್ಲಿ ಕೆಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಸುವುದನ್ನು ಬಿಟ್ಟು ಈ ರೀತಿ ವರ್ತಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.