Homeರಾಜ್ಯಅರಬೈಲ್‌ ಘಾಟ್‌ನಲ್ಲಿ ಲಾರಿ-ಕ್ರೂಸರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ

ಅರಬೈಲ್‌ ಘಾಟ್‌ನಲ್ಲಿ ಲಾರಿ-ಕ್ರೂಸರ್‌ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ

ಹುಬ್ಬಳ್ಳಿ,ಜು.9-ಬೆಳಗಿನ ಜಾವ ಜವರಾಯ ಅಟ್ಟಹಾಸ ಮೆರೆದಿದ್ದು, ಲಾರಿ ಹಾಗೂ ಕ್ರೂಸರ್‌ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಕೂಕಿನ ಅರಬೈಲ್‌ ಘಾಟ್‌ನ ಬಳಗಾರ್‌ ಬಳಿ ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ.ಧಾರವಾಡ ಮೂಲದ ಕ್ರೂಸರ್‌ ವಾಹನದ ಚಾಲಕ ಸಂಜಯ ಅಂಗಡಿ (48), ಬಸವರಾಜ ಕನಕಮನವರ (48), ಅಭಿಷೇಕ ಈಶ್ವರ್‌ (28), ಅಕ್ಷಯ್‌ (26), ಅಭಿಷೇಕ್‌ (26) ಹಾಗೂ ಮಂಜುನಾಥ ಚುಳಕಿ (33) ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗಂಭೀರ ಗಾಯಗೊಂಡಿರುವ ಶಿವರಾಜ್‌ ದುರ್ಗಪ್ಪ ಮಡಿವಾಳರ (22), ನವೀನ್‌ (24) ಮತ್ತು ಸಚಿನ್‌ ಚನ್ನಪ್ಪ ಕಲಘಟಗಿ (28) ಅವರನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ. ಇವರೆಲ್ಲರೂ ಸ್ವಿಗ್ಗಿ ಸಂಸ್ಥೆಯಲ್ಲಿ ಪಾರ್ಟ್‌ಟೈಮ್‌ ಡೆಲಿವರಿ ಬಾಯ್‌್ಸ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಧರ್ಮಸ್ಥಳ ಹಾಗೂ ಚಿಕ್ಕಮಗಳೂರು ಪ್ರವಾಸಕ್ಕೆಂದು ಕ್ರೂಸರ್‌ ವಾಹನದಲ್ಲಿ ಚಾಲಕ ಸೇರಿದಂತೆ ಒಟ್ಟು ಒಂಬತ್ತು ಮಂದಿ ನಿನ್ನೆ ರಾತ್ರಿ ಧಾರವಾಡದಿಂದ ಪ್ರಯಾಣ ಬೆಳೆಸಿದ್ದಾರೆ. ಈ ಕ್ರೂಸರ್‌ ವಾಹನ ಯಲ್ಲಾಪುರ ತಾಲ್ಲೂಕಿನ ಅರಬೈಲ್‌ ಘಾಟ್‌ನ ಬಳಗಾರ್‌ ಬಳಿ ಇಂದು ಮುಂಜಾನೆ 2 ಗಂಟೆ ಸುಮಾರಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಅತೀ ವೇಗವಾಗಿ ಬಂದ ಲಾರಿ ಮುಖಾಮುಖಿಯಾಗಿ ಕ್ರೂಸರ್‌ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.

ಅಪಘಾತದ ಭೀಕರತೆ ಎಷ್ಟಿತ್ತೆಂದರೆ ಕ್ರೂಸರ್‌ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ಯಲ್ಲಾಪುರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಸ್ಥಳೀಯರ ನೆರವಿನಿಂದ ಕ್ರೂಸರ್‌ ವಾಹನದೊಳಗೆ ಸಿಕ್ಕಿ ನರಳಾಡುತ್ತಿದ್ದ ಮೂವರು ಯುವಕರನ್ನು ಹೊರಗೆ ಕರೆತಂದು ಆಸ್ಪತ್ರೆಗೆ ದಾಖಲಿಸಲಾಯಿತು.

ವಾಹನದೊಳಗೆ ಸಿಕ್ಕಿಕೊಂಡಿದ್ದ ಮೃತದೇಹಗಳನ್ನು ಹೊರಗೆ ತಂದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿರುವ ಪೊಲೀಸರು ನಂತರ ಮೃತರ ಕುಟುಂಬಸ್ಥರಿಗೆ ಮಾಹಿತಿ ನೀಡಿದ್ದಾರೆ.ತಮ ಮನೆ ಮಕ್ಕಳು ಸಾವನ್ನಪ್ಪಿರುವ ಸುದ್ದಿ ತಿಳಿದು ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

ಈ ಮಾರ್ಗದಲ್ಲಿ ಅಪಘಾತ ಸಂಭವಿಸಿದ್ದರಿಂದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿ ರಸ್ತೆಯಲ್ಲಿ ವಾಹನಗಳು ನಿಂತಲ್ಲೇ ನಿಂತಿದ್ದವು.ಪೊಲೀಸರು ಸ್ಥಳಕ್ಕೆ ಕ್ರೇನ್‌ ತರಿಸಿಕೊಂಡು ನಜ್ಜುಗುಜ್ಜಾಗಿದ್ದ ಕ್ರೂಸರ್‌ ವಾಹನವನ್ನು ರಸ್ತೆ ಬದಿ ಸರಿಸಿ ನಂತರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಲಾರಿ ಚಾಲಕನ ಅತೀ ವೇಗ ಚಾಲನೆಯಿಂದ ಈ ಅಪಘಾತ ಸಂಭವಿಸಿದೆ ಎಂಬುವುದು ಮೇಲ್ನೋಟಕ್ಕೆ ಕಂಡು ಬಂದಿದೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಯಲ್ಲಾಪುರ ಠಾಣೆ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

RELATED ARTICLES

Latest News