ಬಾಗಲಕೋಟೆ,ಫೆ.21- ಕಬ್ಬಿನ ಕಟಾವು ಕೆಲಸಕ್ಕೆ ಕಾರ್ಮಿಕರನನು ಕರೆದುಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್ನ ಟ್ರ್ಯಾಲಿ ಕಂದಕಕ್ಕೆ ಉರುಳಿದ ಪರಿಣಾಮ ಎರಡು ವರ್ಷದ ಮಗು ಸೇರಿದಂತೆ ನಾಲ್ವರು ಮೃತಪಟ್ಟಿರುವ ಘಟನೆ ಜಮಖಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗಿನ ಜಾವ ನಡೆದಿದೆ.
ಮೃತಪಟ್ಟವರನ್ನು ಮಹಾರಾಷ್ಟ್ರ ಮೂಲದ ಮನೀಷ್ ಪಾಂಡೆ (23) ಹಲಕಿ ಪಾಂಡೆ (2), ಲಕ್ಷ್ಮಿ ಚಿರಮಡಿ (27) ಹಾಗೂ ರೇಖಾ ಭೂಕೆ (24) ಎಂದು ಗುರುತಿಸಲಾಗಿದೆ. ಜಮಖಂಡಿಯಲ್ಲಿ ಕಬ್ಬಿನ ಕಟಾವು ಕೆಲಸಕ್ಕಾಗಿ ಮಹಾರಾಷ್ಟ್ರ ರಾಜ್ಯದ ಯುವತಾಳ್ ಜಿಲ್ಲೆಯ ಬೂಸಾ ತಾಲ್ಲೂಕಿನ ಗುಪವಾಡಿಯ 20 ಕಾರ್ಮಿಕರನ್ನು ಟ್ರ್ಯಾಕ್ಟರ್ನಲ್ಲಿ ಕರೆದುಕೊಂಡು ಬರಲಾಗುತ್ತಿತ್ತು.
ಇಂದು ಬೆಳಗಿನ ಜಾವ 2 ಗಂಟೆ ಸುಮಾರಿನಲ್ಲಿ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಟ್ಟೆ ಕೆರೆ ಸಮೀಪ ಟ್ರ್ಯಾಕ್ಟರ್ ಹಾಗೂ ಟ್ರ್ಯಾಲಿ ನಡುವೆ ಅಳವಡಿಸಿದ್ದ ಕೊಂಡಿ ತುಂಡಾಗಿ ಕಂದಕಕ್ಕೆ ಉರುಳಿದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದು, ಅವರನ್ನು ಜಮಖಂಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಜಮಖಂಡಿ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
