Homeರಾಜ್ಯಕಾವೇರಿ ನೀರು ಹಂಚಿಕೆ ವಿವಾದ : ಸುಪ್ರೀಂಗೆ ಮೊರೆ ಹೋಗುವುದು ಅನಿವಾರ್ಯ

ಕಾವೇರಿ ನೀರು ಹಂಚಿಕೆ ವಿವಾದ : ಸುಪ್ರೀಂಗೆ ಮೊರೆ ಹೋಗುವುದು ಅನಿವಾರ್ಯ

ಬೆಂಗಳೂರು, ಆ.12- ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರನ್ನು 15 ದಿನಗಳ ಕಾಲ ಹರಿಸಿದರೆ ರಾಜ್ಯದ ಜಲಾಶಯಗಳಿಂದ ಸುಮಾರು 16 ಟಿಎಂಸಿ ನೀರು ಖಾಲಿಯಾಗಲಿದೆ ಎಂದು ಜಲಸಂಪನೂಲ ಸಚಿವ ರಾಮಲಿಂಗಾರೆಡ್ಡಿ ಆತಂಕ ವ್ಯಕ್ತಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ 3,500 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಲಾಗಿತ್ತು. ಅದರಿಂದ ಹೆಚ್ಚಿನ ಪರಿಣಾಮ ಉಂಟಾಗಿರಲಿಲ್ಲ. ಆದರೆ ಇದೀಗ ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ನೀಡಿರುವ ಆದೇಶ ದುಬಾರಿಯಾಗಿದೆ ಎಂದರು.

ರಾಜ್ಯದಲ್ಲಿನ ನೀರಿನ ಲಭ್ಯತೆಯನ್ನು ಪರಿಗಣಿಸಿ ಅಲ್ಪ ಪ್ರಮಾಣದಲ್ಲಿ ನೀರು ಹರಿಸುವಂತೆ ಸೂಚಿಸಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ. ತಮಿಳುನಾಡಿನ ಜಲಾಶಯಗಳಲ್ಲಿ ಸಾಕಷ್ಟು ನೀರಿದ್ದು, ಅಂತರ್ಜಲ ಮಟ್ಟವೂ ಉತ್ತಮವಾಗಿದೆ. ಅಲ್ಲದೆ ಮುಂಗಾರು ಉತ್ತಮವಾಗಿದ್ದು, ಹಿಂಗಾರು ಮಳೆಯೂ ಉತ್ತಮವಾಗುವ ನಿರೀಕ್ಷೆಯಿದೆ. ಆದರೆ ಕರ್ನಾಟಕದಲ್ಲಿ ಮುಂಗಾರು ಕೈಕೊಟ್ಟಿದೆ, ಹಿಂಗಾರು ನಿರೀಕ್ಷೆ ಆಶಾದಾಯಕವಾಗಿಲ್ಲ. ಅಂತರ್ಜಲ ಮಟ್ಟ ಕುಸಿದಿದೆ. ಸುಮಾರು 1,500 ಅಡಿ ಆಳಕ್ಕೆ ಕೊರೆದರೂ ನೀರು ಸಿಗದ ಪರಿಸ್ಥಿತಿ ಇದೆ.

ಈ ಎಲ್ಲ ಅಂಶಗಳನ್ನು ಜಲಸಂಪನೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಸೇರಿದಂತೆ ರಾಜ್ಯದ ಹಿರಿಯ ಅಧಿಕಾರಿಗಳು, ಕಾನೂನು ತಜ್ಞರು ಹಾಗೂ ನೀರಾವರಿ ತಜ್ಞರು ಸಿಡಬ್ಲ್ಯೂಆರ್‌ಸಿ ಮುಂದೆ ಸಮರ್ಥ ವಾದ ಮಂಡಿಸಿ, ಮನವರಿಕೆ ಮಾಡಿಕೊಟ್ಟಿದ್ದರೂ, ರಾಜ್ಯದ ವಾದವನ್ನು ಪರಿಗಣಿಸದೆ ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿರುವುದು ಸರಿಯಲ್ಲ ಎಂದು ರಾಮಲಿಂಗಾರೆಡ್ಡಿ ಹೇಳಿದರು.

ಕಾವೇರಿ ನೀರು ನಿರ್ವಹಣಾ ಸಮಿತಿಯ ಆದೇಶದ ಕುರಿತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಕಾನೂನು ತಜ್ಞರೊಂದಿಗೆ ನಿನ್ನೆಯಿಂದಲೂ ನಿರಂತರ ಚರ್ಚೆ ನಡೆಸುತ್ತಿದ್ದಾರೆ. ರಾಜ್ಯದ ಹಿತಾಸಕ್ತಿ ಕಾಪಾಡಲು ಸುಪ್ರೀಂಕೋರ್ಟ್‌ ಮೊರೆ ಹೋಗುವುದು ಅನಿವಾರ್ಯವಾಗಿದ್ದು, ಸರ್ಕಾರ ಅಗತ್ಯವಿರುವ ಎಲ್ಲ ಕಾನೂನು ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಈಗಾಗಲೇ ರಾಜ್ಯದ ಅಡ್ವೋಕೇಟ್‌ ಜನರಲ್‌ ಅವರ ಜೊತೆ ಚರ್ಚೆ ನಡೆಸಲಾಗಿದೆ. ತಮಿಳುನಾಡು ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ್ದ ರಾಜ್ಯದ ವಕೀಲರು ದಾಖಲೆಗಳನ್ನು ಸಲ್ಲಿಸಲಿದ್ದಾರೆ. ಸುಪ್ರೀಂಕೋರ್ಟ್‌ನ ತೀರ್ಪನ್ನು ಆಧರಿಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದರು.

RELATED ARTICLES
spot_img

Latest News