ಬೆಂಗಳೂರು, ಜೂ. 28- ಸ್ವಾಸ್ಥ್ಯ ಸಮಾಜ ಮತ್ತು ಆರೋಗ್ಯಕರ ಭಾರತಕ್ಕಾಗಿ ಪಲ್ಸ್ ಪೋಲಿಯೋ ಅಭಿಯಾನಕ್ಕೆ ಎಲ್ಲರೂ ಕೈ ಜೋಡಿಸಬೇಕೆಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರೆ ನೀಡಿದರು.ಸದಾಶಿವನಗರದ ತಮ ಮನೆಯಲ್ಲಿ ಆಯೋಜಿಸಲಾಗಿದ್ದ ಪಲ್ಸ್ ಪೋಲಿಯೋ ರಾಷ್ಟ್ರೀಯ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಬುದ್ಧಿವಂತರಿದ್ದಾರೆ. ಸಮಾಜಕ್ಕೆ ನಾವೇ ಮೊದಲು ಮಾದರಿಯಾಗಬೇಕು ಎಂಬ ಹಿನ್ನೆಲೆಯಲ್ಲಿ ನನ್ನ ಮನೆಯಿಂದಲೇ ಲಸಿಕಾ ಅಭಿಯಾನವನ್ನು ಆರಂಭಿಸಿದ್ದಾರೆ. ನನ್ನ ಮೊಮಗಳಿಗೆ ಲಸಿಕೆ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ್ದೇನೆ ಎಂದು ಹೇಳಿದರು.
ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು 1972ರಲ್ಲಿ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನವನ್ನು ಆರಂಭಿಸಿದ್ದರು. ರಾಜೀವ್ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಅಭಿಯಾನ ದೊಡ್ಡ ಪ್ರಮಾಣದಲ್ಲಿ ನಡೆದಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಪೋಲಿಯೋ ಮುಕ್ತ ಭಾರತ ಎಂದು ಘೋಷಣೆಯಾಗಿದೆ. ಮಕ್ಕಳನ್ನು ಅಂಗವಿಕಲತೆಯಿಂದ ಕಾಪಾಡುವ ಅಭಿಯಾನದ ಉದ್ದೇಶ ಸಾಕಾರಗೊಂಡಿದೆ. ಆದರೂ ಅಭಿಯಾನವನ್ನು ಮುಂದುವರೆಸಿದ್ದೇವೆ.
ನೆರೆಯ ರಾಷ್ಟ್ರಗಳಲ್ಲಿ ಲಸಿಕೆ ಇಲ್ಲದೇ ಪೋಲಿಯೋ ವೈರಸ್ ಜೀವಂತವಾಗಿದೆ. ಅದರಿಂದ ಭಾರತಕ್ಕೆ ತೊಂದರೆಮಾಡಬಾರದು ಎಂಬ ಕಾರಣಕ್ಕಾಗಿ ಮುನ್ನೆಚ್ಚರಿಕೆ ವಹಿಸುವುದಾಗಿ ಹೇಳಿದರು.ರಾಜ್ಯದಲ್ಲಿ 60 ಲಕ್ಷಕ್ಕೂ ಹೆಚ್ಚಿನ ಮಕ್ಕಳಿಗೆ ಲಸಿಕೆ ಹಾಕಲು ನಿರ್ಧರಿಸಲಾಗಿದೆ. ಇದಕ್ಕೆ ಎನ್ಜಿಓಗಳು, ಸಂಘ ಸಂಸ್ಥೆಗಳು, ಆರೋಗ್ಯ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಅಭಿಯಾನಕ್ಕೆ ಸಹಕರಿಸಿದ್ದಾರೆ ಎಂದು ಹೇಳಿದರು.
ಕರ್ನಾಟಕ ಹೆಲ್ತ್ ಟೂರಿಸಂನಲ್ಲಿ ವಿಶ್ವ ಮಾನ್ಯತೆ ಪಡೆದಿದೆ. ಈ ಮೊದಲು ಚಿಕಿತ್ಸೆ ಹಾಗೂ ಶಸ್ತ್ರ ಚಿಕಿತ್ಸೆಗೆ ಬೇರೆ ದೇಶಗಳಿಗೆ ಹೋಗುತ್ತಿದ್ದವರು ಈಗ ಕರ್ನಾಟಕದತ್ತ ಬರುತ್ತಿದ್ದಾರೆ. ಇಲ್ಲಿ ಉತ್ತಮ ಚಿಕಿತ್ಸೆ ಕೈಗೆಟಕುವ ದರದಲ್ಲಿ ಸಿಗುತ್ತಿದೆ ಎಂಬ ನಂಬಿಕೆಯಿದೆ ಎಂದು ಹೇಳಿದರು.
ಕರ್ನಾಟಕದಲ್ಲಿ ಪ್ರತಿ ವರ್ಷ 13,940 ವೈದ್ಯರನ್ನು ಒಳಗೊಂಡಂತೆ 1.07ಲಕ್ಷ ವೈದ್ಯಕೀಯ ಸಿಬ್ಬಂದಿಗಳು ತಯಾರಾಗುತ್ತಿದ್ದಾರೆ. ದೇಶದ ಎಲ್ಲಿಯೂ ಈ ಪ್ರಮಾಣದಲ್ಲಿ ವೈದ್ಯಕೀಯ ಸಿಬ್ಬಂದಿಗಳು ಸಿಗುತ್ತಿಲ್ಲ. ನಮಲ್ಲಿ ವಿದ್ಯಾಭ್ಯಾಸ ಪಡೆದವರು ಹೊರ ದೇಶಗಳ ಆರೋಗ್ಯ ಸೇವೆಗೆ ವಲಸೆ ಹೋಗುತ್ತಿದ್ದಾರೆ ಎಂದರು.
ಕಳೆದ ಮೂರು ವರ್ಷಗಳಿಂದಲೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಯಾವುದೇ ವಿವಾದಗಳಿಲ್ಲದೇ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದೆ. ಮುಂದಿನ ದಿನಗಳಲ್ಲೂ ಇದೇ ರೀತಿಯ ಜವಾಬ್ದಾರಿಗಳನ್ನು ನಿರ್ವಹಣೆ ಮಾಡಲಾಗುತ್ತಿದೆ ಎಂದು ಹೇಳಿದರು.ಸಚಿವ ಯು.ಟಿ.ಖಾದರ್ ಮಾತನಾಡಿ, ಲಸಿಕಾ ಅಭಿಯಾನಕ್ಕೆ ಎಲ್ಲರೂ ಸಹಕಾರ ನೀಡಬೇಕೆಂದು ಮನವಿ ಮಾಡಿದರು.
