Homeರಾಜ್ಯಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆಶಿ

ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಡಿಕೆಶಿ

Chief Minister DK Shivakumar took oath in the name of Gangadhar Ajja

ಬೆಂಗಳೂರು, ಜೂ.3- ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ವೀರ ಗಂಗಾಧರ ಅಜ್ಜಯ್ಯನ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತಾ ಪ್ರಮಾಣ ವಚನ ಸ್ವೀಕರಿಸಿದರು.

ಲೋಕಭವನದ ಗಾಜಿನ ಮನೆಯಲ್ಲಿ ಪೂರ್ವಾಭಿಮುಖವಾಗಿ ಹಮ್ಮಿಕೊಳ್ಳಲಾಗಿದ್ದ ಸರಳ ಸಮಾರಂಭದಲ್ಲಿ ಮುಖ್ಯಮಂತ್ರಿಗಳ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕಾಗಿ ವಿಶೇಷವಾಗಿ ಪೂರ್ವಾಭಿಮುಖವಾಗಿ ಸಿದ್ದಪಡಿಸಲಾದ ವೇದಿಕೆಯಲ್ಲಿ ರಾಜ್ಯದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯಮಂತ್ರಿಗಳಿಗೆ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಬೋಧಿಸಿದರು.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿಗಳಾಗಿ ಡಾ.ಜಿ.ಪರಮೇಶ್ವರ್ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಪುಟ ದರ್ಜೆಯ ಸಚಿವರುಗಳಾಗಿ 12 ಜನ ಸಚಿವರು ಸಹ ಗೌರವಾನ್ವಿತ ರಾಜ್ಯಪಾಲರಿಂದ ಅಧಿಕಾರಪದ ಮತ್ತು ಗೋಪ್ಯಾತಾ ಪ್ರಮಾಣ ವಚನ ಸ್ವೀಕರಿಸಿದರು.

ಕೆ.ಹೆಚ್. ಮುನಿಯಪ್ಪ, ಕೆ.ಜೆ.ಜಾರ್ಜ್ ಅವರು ದೇವರ ಹೆಸರಿನಲ್ಲಿ, ಎಂ.ಬಿ.ಪಾಟೀಲ್ ಅವರು ವಿಶ್ವಗುರು ಅಣ್ಣ ಬಸವಣ್ಣ ಮತ್ತು ಬಸವಾದಿ ಶರಣರು ಹಾಗೂ ವಿಶ್ವೈಕ್ಯ ಸಿದ್ದೇಶ್ವರ ಮಹಾ ಸ್ವಾಮೀಜಿ ಅವರ ಹೆಸರಿನಲ್ಲಿ, ರಾಮಲಿಂಗಾ ರೆಡ್ಡಿ, ಸತೀಶ್ ಜಾರಕಿಹೊಳಿ, ಕೃಷ್ಣಬೈರೇಗೌಡ, ಪ್ರಿಯಾಂಕ್ ಖರ್ಗೆ, ಅವರು ಶ್ರದ್ಧಾಪೂರ್ವಕವಾಗಿ ಪ್ರಮಾಣವಚನ ಸ್ವೀಕರಿಸಿದರು.

ಯು.ಟಿ. ಖಾದರ್ ಅವರು ದೇವರ ಹೆಸರಿನಲ್ಲಿಈಶ್ವರ ಖಂಡ್ರೆ ಅವರು ದೇವರು ಮತ್ತು ಲಿಂಗೈಕ್ಯ ಚೆನ್ನಬಸವಯ್ಯ ಪಟ್ಟದೇವರ ಹೆಸರಿನಲ್ಲಿ,ಯತೀಂದ್ರ ಸಿದ್ದರಾಮಯ್ಯ ಅವರು ಸಂವಿಧಾನದ ಹೆಸರಿನಲ್ಲಿ, ಬೈರತಿ ಸುರೇಶ್ ಹಾಗೂ ಶರಣ ಪ್ರಕಾಶ್ ಪಾಟೀಲ್ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

ಪ್ರಮಾಣ ವಚನ ಸ್ವೀಕರಿಸುವ ಮುನ್ನ ವೇದಿಕೆಗೆ ಹಾಗೂ ವೇದಿಕೆಯಲ್ಲಿದ್ದ ಅಜ್ಜಯ್ಯ ಅವರ ಪೋಟೋಗೆ ಡಿ.ಕೆ.ಶಿವಕುಮಾರ್ ನಮಸ್ಕರಿಸಿದರು‌‌. ಇದಕ್ಕೂ ಮುನ್ನ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ.ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಸರ್ವಧರ್ಮ ಗುರುಗಳ ಆಶೀರ್ವಾದ ಪಡೆದರು.ವೇದಿಕೆ ಮುಂದೆ ನೆರೆದಿದ್ದ ಗಣ್ಯರು, ಸಭಿಕರ ಬಳಿಗೆ ತೆರಳಿ ಅವರಿಂದ ಅಭಿನಂದನೆ ಸ್ವೀಕರಿಸಿದರು.ಮುಖ್ಯಮಂತ್ರಿಯಾಗಿ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನೆರೆದಿದ್ದ ಪ್ರೇಕ್ಷಕರು ಹರ್ಷೋದ್ಘಾರ ವ್ಯಕ್ತಪಡಿಸಿದರು‌.

ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯದ ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕರ್ನಾಟಕ ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವಿಭು ಬಖ್ರು, ಎ.ಐ.ಸಿ.ಸಿ ಅಧ್ಯಕ್ಷರು ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ಕೇಂದ್ರ ಲೋಕಸಭಾ ವಿರೋಧ ಪಕ್ಷ ನಾಯಕರಾದ ರಾಹುಲ್ ಗಾಂಧಿ, ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಡಾ.ಸುಖವೀಂದರ್ ಸಿಂಗ್ ಸುಖು, ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಕೇರಳಂ ರಾಜ್ಯದ ಮುಖ್ಯಮಂತ್ರಿ ವಿ.ಟಿ.ಸತೀಶನ್, ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ‌ ವೇಣುಗೋಪಾಲ್, ಲೋಕಸಭಾ ಸದಸ್ಯರಾದ ರಣದೀಪ್ ಸಿಂಗ್ ಸುರ್ಜೆವಾಲ, ವಿಧಾನ ಪರಿಷತ್ತಿನ ಸಭಾಪತಿಯಾದ ಬಸವರಾಜ ಎಸ್.ಹೊರಟ್ಟಿ, ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರು, ವಿವಿಧ ರಾಜ್ಯಗಳ ಉಪಮುಖ್ಯಮಂತ್ರಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರುಗಳು, ಸಂಸದರು, ಶಾಸಕರು, ಸರ್ವಧರ್ಮ ಗುರುಗಳು, ಕನಕಪುರ ದೊಡ್ಡಾಲಹಳ್ಳಿ ಸರಕಾರಿ ಶಾಲೆ ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು
ಪೌರ ಕಾರ್ಮಿಕರು, ರೈತ ಮುಖಂಡರು, ದಲಿತ ಸಂಘಟನೆ ಮುಖಂಡರು, ಹಿಂದುಳಿದ ವರ್ಗಗಳ ಮುಖಂಡರು, ಸ್ತ್ರೀ ಶಕ್ತಿ ಸಂಘಗಳ ಪ್ರತಿನಿಧಿಗಳು, ಮಹಿಳಾ ಮುಖಂಡರು, ವಿವಿಧ ಮಾಧ್ಯಮ ಕ್ಷೇತ್ರದ ಗಣ್ಯರು, ಸಿನಿಮಾ ರಂಗದವರು, ನ್ಯಾಯಾಂಗ ಇಲಾಖೆಯ ಅಧಿಕಾರಿಗಳು, ಕ್ರೀಡಾ ಕ್ಷೇತ್ರದ ಪಟುಗಳು, ನಾಟಕ ರಂಗದ ಕಲಾವಿದರು, ಸಾಹಿತಿಗಳು, ಕಲಾವಿದರು, ಕೈಗಾರಿಕೋದ್ಯಮಿಗಳು, ವಾಣಿಜ್ಯೋದ್ಯಮಿಗಳು, ಹೋಟೆಲ್ ಉದ್ಯಮಿಗಳು, ಯುವ ಮುಖಂಡರು, ಕನ್ನಡ ಪರ ಸಂಘಟನೆಯ ಮುಖಂಡರು ಸೇರಿದಂತೆ‌ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು,
ಮತ್ತಿತರರು ಉಪಸ್ಥಿತರಿದ್ದರು.

ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.

RELATED ARTICLES

Latest News