ಬೆಂಗಳೂರು, ಜೂ.11- ವಿಧಾನಸಭೆಯಿಂದ ವಿಧಾನಪರಿಷತ್ಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮಳವಳ್ಳಿ ಶಿವಣ್ಣ ಅವರು ಕ್ರಿಮಿನಲ್ ಪ್ರಕರಣಗಳನ್ನು ಮುಚ್ಚಿ ಹಾಕಿದ್ದಾರೆ ಎಂದು ಜೆಡಿಎಸ್ ದೂರು ನೀಡಿದೆ.
ತಮ ಮೇಲೆ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅಫಿಡವಿಟ್ನಲ್ಲಿ ಮಳವಳ್ಳಿ ಶಿವಣ್ಣ ಮುಚ್ಚಿಹಾಕಿದ್ದಾರೆ. ಹೀಗಾಗಿ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ಬಿಜೆಪಿ, ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಗೋವಿಂದರಾಜು ಚುನಾವಣಾಧಿಕಾರಿ ಹಾಗೂ ವಿಧಾನಸಭಾ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಅವರಿಗೆ ದೂರು ನೀಡಿದ್ದಾರೆ.
ಮಳವಳ್ಳಿ ಶಿವಣ್ಣ ವಿರುದ್ಧ ಒಟ್ಟು ನಾಲ್ಕು ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಇದು ಅಫಿಡವಿಟ್ನಲ್ಲಿ ಹಾಕಬೇಕೆಂಬ ನಿಯಮವಿಲ್ಲ ಎಂದು ಮುಚ್ಚಿಹಾಕಿದ್ದಾರೆ. ಹೀಗಾಗಿ ತಪ್ಪು ಮಾಹಿತಿ ನೀಡಿರುವ ಅವರ ನಾಮಪತ್ರವನ್ನು ತಿರಸ್ಕರಿಸಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.
ಅಫಿಡವಿಟ್ನಲ್ಲಿ ಯಾವುದೇ ಅಭ್ಯರ್ಥಿಗಳು ತಮ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಇಲ್ಲಿ ಅಭ್ಯರ್ಥಿಯು ಮುಚ್ಚಿ ಹಾಕಿರುವುದರಿಂದ ಇದೊಂದು ಗಂಭೀರ ಸ್ವರೂಪದ ಪ್ರಕರಣವಾಗಿರುವುದರಿಂದ ನಾಮಪತ್ರವನ್ನು ತಿರಸ್ಕರಿಸಬೇಕು ಎಂದು ಆಗ್ರಹಿಸಿದ್ದಾರೆ.ದೂರು ಸ್ವೀಕರಿಸಿರುವ ಚುನಾವಣಾಧಿಕಾರಿ ಈ ಬಗ್ಗೆ ಪರಿಶೀಲಿಸಿ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
