ಬೆಂಗಳೂರು, ಮೇ 30- ಹಿರಿಯ ಮುತ್ಸದ್ಧಿ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿಸಿ ರಾಜೀನಾಮೆ ಕೊಡಿಸಿದ್ದ ಬಿಜೆಪಿಯವರು ಸಿದ್ದರಾಮಯ್ಯ ಅವರ ಅಧಿಕಾರ ನಿರ್ಗಮನದ ಬಗ್ಗೆ ಮಾತನಾಡುವ ನೈತಿಕತೆ ಹೊಂದಿದ್ದಾರೆಯೇ? ಎಂದು ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಅಗೌರವದಿಂದ ಕೆಳಗಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಆರ್.ಅಶೋಕ್, ಸುನೀಲ್ಕುಮಾರ್ ಮತ್ತಿತರರು ಮಾತನಾಡಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದೆಯೇ? ಬಿಜೆಪಿ ಸರ್ಕಾರ ಇದ್ದಾಗ ಸರ್ವೋಚ್ಛ ನಾಯಕ ಯಡಿಯೂರಪ್ಪರನ್ನು 20 ತಿಂಗಳೊಳಗೆ ಕಣ್ಣೀರು ಹಾಕಿಸಿ ರಾಜಭವನಕ್ಕೆ ಹೋಗಿ ರಾಜೀನಾಮೆ ನೀಡುವಂತ ಪರಿಸ್ಥಿತಿಯನ್ನು ನಿರ್ಮಿಸಿದ್ದರು ಎಂದು ಆಕ್ರೋಶ ವ್ಯಕ್ತ ಪಡಿಸಿದರು.
ಸಿದ್ದರಾಮಯ್ಯ ಅವರ ನಂತರ ಎಸ್ಸಿ, ಎಸ್ಟಿ ಸಮುದಾಯದವರನ್ನು ಅಥವಾ ಹಿಂದುಳಿದ ವರ್ಗದವರನ್ನು ಮುಖ್ಯಮಂತ್ರಿ ಮಾಡಬಹುದಿತ್ತು ಎಂದು ಬಿಜೆಪಿಯವರು ಪ್ರತಿಪಾದಿಸುತ್ತಿದ್ದಾರೆ. ಅವರು ಏನು ಮಾಡಿದ್ದರು, ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಇಳಿಸಿ, ಅದೇ ಲಿಂಗಾಯಿತ ಸಮುದಾಯದ ಬಸವರಾಜ ಬೊಮಾಯಿ ಅವರನ್ನು ಮುಖ್ಯಮಂತ್ರಿ ಮಾಡಲಿಲ್ಲವೇ. ಅವರೇಕೆ ದಲಿತ ಅಥವಾ ಹಿಂದುಳಿದ ಸಮುದಾಯದವರಿಗೆ ಮುಖ್ಯಮಂತ್ರಿ ಸ್ಥಾನ ನೀಡಲಿಲ್ಲ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯಯಾವುದೇ ಗೊಂದಲ ಇಲ್ಲದೆ ರಾಜೀನಾಮೆ ನೀಡಿದ್ದಾರೆ. ಅವರ ಕೆಲ ಅಭಿಮಾನಿಗಳು ಕಣ್ಣಿರು ಹಾಕಿದ್ದಾರೆ. ಸಿದ್ದರಾಮಯ್ಯ ಅವರ ನಾಯಕತ್ವದಲ್ಲಿ ಕೆಲಸ ಮಾಡಿದ್ದವರು ಭಾವೋದ್ವೇಗಕ್ಕೆ ಒಳಗಾಗಿ ಕಣ್ಣೀರು ಹಾಕಿದ್ದಾರೆ. ಅದು ಸಹಜವಾದ ಬೆಳವಣಿಗೆ, ತಪ್ಪೇನಿದೆ ಎಂದು ಪ್ರಶ್ನಿಸಿದರು.
ಸಿದ್ದರಾಮಯ್ಯ ಅವರ ಮಾರ್ಗದರ್ಶನದಲ್ಲಿ ಮುಂದಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ಹೊಸ ಇತಿಹಾಸ ಬರೆಯಲಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.ರಾಜ್ಯದಲ್ಲಿ ಮೊದಲು ಮುಖ್ಯಮಂತ್ರಿಯವರ ಆಯ್ಕೆಯಾಗಲಿ. ನಂತರ ಸಚಿವ ಸಂಪುಟದ ಇತರ ಸದಸ್ಯರ ಆಯ್ಕೆ ನಡೆಯಲಿದೆ. ನಾನು ಸಂಪುಟ ಸ್ಥಾನದ ಆಕಾಂಕ್ಷಿಯಾಗಿದ್ದೇನೆ ಎಂದರು.
ಸಚಿವ ಸ್ಥಾನಕ್ಕಾಗಿ ಸುಮಾರು 30 ಮಂದಿ ದೆಹಲಿಗೆ ಹೋಗಿ ವರಿಷ್ಠರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದೇವೆ. ಅವರಲ್ಲಿ ಕನಿಷ್ಠ 20 ಜನರಿಗಾದರೂ ಸಚಿವ ಸ್ಥಾನ ನೀಡುವಂತೆ ಮನವಿ ಮಾಡಿದ್ಧೇವೆ. ಹೈಕಮಾಂಡ್ ನಮನ್ನು ಪರಿಗಣಿಸುವ ವಿಶ್ವಾಸವಿದೆ ಎಂದು ಹೇಳಿದರು.
