ಉಡುಪಿ,ಮಾ.16- ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದಿಂದ ಸಿಲಿಂಡರ್ ಸರಬರಾಜಿನಲ್ಲಿ ವ್ಯತ್ಯಯವಾಗಿದ್ದು, ನಾಗರಿಕರು ಪರದಾಡುತ್ತಿರುವ ಬೆನ್ನಲ್ಲೇ ಅನಿಲ ತುಂಬಿಕೊಂಡು ತೆರಳುತ್ತಿದ್ದ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ಮಗುಚಿಬಿದ್ದಿರುವ ಘಟನೆ ಜಿಲ್ಲೆಯ ಕಾಟಪಾಡಿ ಬಳಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಎಲ್ಪಿಜಿ ಸಾಗಾಟ ಮಾಡುತ್ತಿದ್ದ ಟ್ಯಾಂಕರ್ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯಿಂದ ನಿಯಂತ್ರಣ ಕಳೆದುಕೊಂಡು ಉರುಳಿಬಿದ್ದಿದೆ.
ಅದೃಷ್ಟವಶಾತ್ ಯಾವುದೇ ದುರಂತ ಸಂಭವಿಸಿಲ್ಲ. ಸುದ್ದಿ ತಿಳಿದ ಕೂಡಲೇ ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ದೌಡಾಯಿಸಿ ಮುನ್ನೆಚ್ಚರಿಕೆ ವಹಿಸಿ ಅನಿಲ ಸೋರಿಕೆಯಾಗದಂತೆ ಕ್ರಮ ಕೈಗೊಂಡಿದ್ದಾರೆ.
ಬೃಹತ್ ಗಾತ್ರದ ಟ್ಯಾಂಕರ್ ಉರುಳಿಬಿದ್ದಿದ್ದು, ಸಂಚಾರ ಅಸ್ತವ್ಯಸ್ಥಗೊಂಡಿದ್ದು, ಕಿಲೋಮೀಟರ್ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಎರಡು ಖಾಲಿ ಟ್ಯಾಂಕರ್ಗಳನ್ನು ತರಿಸಿ ಉರುಳೀಬಿದ್ದ ಟ್ಯಾಂಕರ್ನಿಂದ ಅನಿಲ ಸ್ಥಳಾಂತರಿಸುವ ಕಾರ್ಯದಲ್ಲಿ ತೊಡಗಿದ್ದರು.
ಒಂದು ವೇಳೆ ಅನಿಲ ಸೋರಿಕೆಯಾಗಿದ್ದರೆ ದೊಡ್ಡ ಮಟ್ಟದಲ್ಲಿ ಅನಾಹುತವೇ ಸಂಭವಿಸುತ್ತಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಅನಿಲ ಸೋರಿಕೆಯಾಗದಂತೆ ಕ್ರಮ ಕೈಗೊಂಡು ಟ್ಯಾಂಕರ್ ಮೇಲೆ ನಿರಂತರವಾಗಿ ನೀರು ಸಿಂಪಡಿಸಿದ್ದಾರೆ. ಇದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
