ಬೆಂಗಳೂರು,ಏ.28- ಸರ್ವೋಚ್ಚ ನ್ಯಾಯಲಯದ ಆದೇಶದಂತೆ ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಚುನಾವಣೆ ನಡೆಸಲು ನಾವು ಸಿದ್ದರಿದ್ದೇವೆ ಎಂದು ರಾಜ್ಯ ಚುನಾವಣಾ ಆಯೋಗ ಸ್ಪಷ್ಟನೆ ನೀಡಿದೆ.
ನ್ಯಾಯಲಯದ ಆದೇಶದಂತೆ 5 ನಗರಸಭೆಗಳ ಚುನಾವಣಾ ಪ್ರಕ್ರಿಯೆಯನ್ನು ಜೂನ್ 30 ರೊಳಗೆ ಪೂರ್ಣಗೊಳಿಸುವ ಗುರಿ ಇಟ್ಟುಕೊಂಡಿರುವುದಾಗಿ ತಿಳಿಸಿದೆ.369 ವಾರ್ಡ್ಗಳಿಗೆ ಸಂಬಂಧಿಸಿದಂತೆ ಏ.18 ರಂದು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಚುನಾವಣೆಗೆ ಅಗತ್ಯವಾದ ಎಲ್ಲಾ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ಆಯೋಗ ಹೇಳಿದೆ.
ಸರ್ಕಾರಿ ಮತ್ತು ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳನ್ನು ಚುನಾವಣಾ ಕರ್ತವ್ಯಗಳಿಗೆ ನಿಯೋಜಿಸಲಾಗಿದೆ. ಸಿಬ್ಬಂದಿ ಹಾಗೂ ಪೊಲೀಸ್ ಇಲಾಖೆಯವರನ್ನು ಕೂಡ ಕರ್ತವ್ಯಕ್ಕೆ ನಿಯೋಜಿಸುವ ಪ್ರಕ್ರಿಯೆ ನಡೆದಿದೆ. ಹೀಗಾಗಿ ಕೆಲವು ಸವಾಲುಗಳು ಎದುರಾಗಿವೆ.
ಏಪ್ರಿಲ್ 16ರಿಂದ ಮೇ 15ರವರೆಗೆ ಜನಗಣತಿ ಕಾರ್ಯ ನಡೆಯುತ್ತಿದೆ ಅಧಿಕಾರಿಗಳು ಈಗ ಜನಗಣತಿಯಲ್ಲಿ ನಿರತರಾಗಿದ್ದಾರೆ. ಮೇ ಮತ್ತು ಜೂನ್ ತಿಂಗಳಲ್ಲಿ ಶೈಕ್ಷಣಿಕ ಪರೀಕ್ಷೆಗಳ ಕರ್ತವ್ಯಗಳೂ ಇವೆ. ಇವುಗಳಿಂದ ಮಾನವ ಸಂಪನ್ಮೂಲ, ಮೂಲಸೌಕರ್ಯ ಮತ್ತು ಲಾಜಿಸ್ಟಿಕ್್ಸ ಒದಗಿಸುವಲ್ಲಿ ಅಡಚಣೆ ಎದುರಾಗುವ ಸಾಧ್ಯತೆ ಇದೆ.
ಹೀಗಾಗಿ ಚುನಾವಣಾ ದಿನಾಂಕ ಮುಂದೂಡುವಂತೆ ನ್ಯಾಯಲಯಕ್ಕೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಬಿಂಬಿಸಲಾಗಿತ್ತು.ಆದರೆ, ರಾಜ್ಯ ಚುನಾವಣಾ ಆಯೋಗ ತನ್ನ ಅಫಿಡವಿಟ್ನಲ್ಲಿ ಚುನಾವಣೆಯನ್ನು ಮುಂದೂಡುವ ಬೇಡಿಕೆ ಮಾಡಿಲ್ಲ. ಹೆಚ್ಚುವರಿ ಸಮಯಾವಕಾಶವೂ ಕೇಳಿಲ್ಲ. ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಚುನಾವಣೆಗೆ ಆಯೋಗವು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ಸ್ಪಷ್ಟನೆ ನೀಡಿದೆ.
ಚುನಾವಣೆಯನ್ನು ಸಮರ್ಪಕವಾಗಿ ನಡೆಸಲು ಅಗತ್ಯ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸುವಂತೆ ಸರ್ಕಾರಕ್ಕೆ ಆಯೋಗ ಮನವಿ ಮಾಡಿದೆ ಎಂದು ರಾಜ್ಯ ಚುನಾವಣೆ ಅಯೋಗ ಮಾಹಿತಿ ನೀಡಿದೆ.
