ಹಾವೇರಿ, ಆ.20- ಅತಿವೇಗವಾಗಿ ಬಂದ ಕಾರು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೃತರನ್ನು ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡಾವಣೆ ನಿವಾಸಿಗಳಾದ ಸಿದ್ಧಾರ್ಥ (27), ಹಸನುಖಿ (29) ಮತ್ತು ಯಶೋಧಾಬಾಯಿ (51) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಗಾಯಗೊಂಡಿರುವ ಸೌಂದರ್ಯ (26), ಸಿಂಧೂ (24) ಹಾಗೂ ಒಂದು ವರ್ಷದ ಮಗು ಕಶ್ವಶ್ರೀ ಅವರನ್ನು ದಾವಣಗೆರೆಯ ಎಸ್ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರಿನಲ್ಲಿ ಮಗು ಸೇರಿದಂತೆ ಆರು ಮಂದಿ ರಾಣೇಬೆನ್ನೂರಿನಿಂದ ದಾವಣಗೆರೆಗೆ ಬೆಳಗಿನ ಜಾವ 3.30ರ ಸುಮಾರಿಗೆ ಹಿಂದಿರುಗುತ್ತಿದ್ದರು. ಚಿತ್ರದುರ್ಗ-ಹಾವೇರಿ ಜಿಲ್ಲೆ ಗಡಿಯ ಚಳಗೇರಿ ಟೋಲ್ ಬಳಿ ಲಾರಿ ನಿಂತಿರುವುದು ಗಮನಕ್ಕೆ ಬಾರದೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ರಾಣೇಬೆನ್ನೂರು ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು. ಕಾರಿನೊಳಗೆ ಸಿಕ್ಕಿಕೊಂಡಿದ್ದ ಮೂವರ ಮೃತದೇಹಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
