ಬೆಂಗಳೂರು,ಏ.9- ಆರ್ಎಸ್ಎಸ್ ಮತ್ತು ಬಿಜೆಪಿ ಬಗ್ಗೆ ಬಳಸಿರುವ ಶಬ್ದದ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆತಾವ ಲೋಕನ ಮಾಡಿಕೊಳ್ಳಬೇಕು ಎಂದು ಕೇಂದ್ರದ ಭಾರಿ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಬೆಂಗಳೂರು ಮತ್ತು ಮೈಸೂರು ನಡುವಿನ ರೈಲು ಮಾರ್ಗದಲ್ಲಿ ವಿಂಡೋ ಟ್ರೈಲಿಂಗ್ ಪರಿವೀಕ್ಷಣೆ ಸಂದರ್ಭದಲ್ಲಿ ಮಾರ್ಗಮಧ್ಯೆ ಶೆಟ್ಟಿಹಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾನೂನು ತಂದಿದೆ. ಅದರ ಪ್ರಕಾರ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಯಾವ ಕ್ರಮ ಜರುಗಿಸುತ್ತಾರೆ ಕಾದು ನೋಡೋಣ ಎಂದರು.
ಮಲ್ಲಿಕಾರ್ಜುನ ಖರ್ಗೆಯವರು ಹಿರಿಯ ನಾಯಕರು, ಅನುಭವ ಉಳ್ಳವರು, ಹಿರಿಯ ಮುತ್ಸದ್ದಿಗಳು ಆಗಿದ್ದು, ಉತ್ತಮ ಸ್ಥಾನಕ್ಕೇರಿದ ಮೇಲೂ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಅವರು ಟೀಕಿಸಿದರು.
ಇಂದು ರಾಜ್ಯದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಮತದಾನ ನಡೆಯುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷಗಳು ತೀವ್ರ ಸೆಣಸಾಟ ನಡೆಸಿವೆ. ಉಭಯ ಪಕ್ಷಗಳು ಗೆಲುವಿನ ವಿಶ್ವಾಸ ಹೊಂದಿವೆ. ಮೇ 4ರಂದು ಫಲಿತಾಂಶ ಏನಾಗಲಿದೆ ಎಂಬುದನ್ನು ಕಾದುನೋಡೋಣ. ಎನ್ಡಿಎ ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸವಿದೆ ಎಂದರು.
ಸಾರ್ವಜನಿಕರ ಮನವಿಗಳ ಹಿನ್ನೆಲೆಯಲ್ಲಿ ರೈಲ್ವೆ ಕಾಮಗಾರಿಗಳು, ರೈಲು ನಿಲುಗಡೆಗೆ ಕೋರಿಕೆಗಳು, ರೈಲ್ವೆ ಮಾರ್ಗದ ಕೆಳಸೇತುವೆ, ಮೇಲ್ಸೇತುವೆ ನಿರ್ಮಾಣ ಹಾಗೂ ರೈಲ್ವೆ ಗೇಟ್ಗಳ ನಿರ್ಮಾಣದ ಬೇಡಿಕೆಗಳ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಪರಿವೀಕ್ಷಣೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಹೇಳಿದರು.
