ವಿಜಯಪುರ, ಆ.6- ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ರಾಜೀನಾಮೆ ನೀಡಿದ್ದ ಇಂಡಿ ಕ್ಷೇತ್ರದ ಶಾಸಕ ಯಶವಂತರಾಯಗೌಡ ಪಾಟೀಲ ಅವರು, ಪಕ್ಷದ ಹಿರಿಯ ನಾಯಕರ ಮನವೊಲಿಕೆಯ ಬಳಿಕ ತಮ್ಮ ರಾಜೀನಾಮೆಯನ್ನು ಹಿಂಪಡೆದಿರುವುದಾಗಿ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿರಿಯ ನಾಯಕರು ನನ್ನೊಂದಿಗೆ ಮಾತುಕತೆ ನಡೆಸಿ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಅವರ ಮಾತುಗಳಿಂದ ನನಗೆ ಸಮಾಧಾನವಾಗಿದೆ. ಆದ್ದರಿಂದ ರಾಜೀನಾಮೆ ಹಿಂಪಡೆದಿದ್ದೇನೆ. ಜನರ ಪ್ರೀತಿ ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ, ಎಂದರು.
ಸಂಕಷ್ಟದ ಸಮಯದಲ್ಲೂ ನಾವು ಕಾಂಗ್ರೆಸ್ ಪಕ್ಷವನ್ನು ಕಟ್ಟಿದ್ದೇವೆ. ನನ್ನ ತಂದೆಯೂ ಅನೇಕ ಅಡೆತಡೆಗಳು ಮತ್ತು ಒತ್ತಡಗಳ ನಡುವೆಯೂ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಿದ್ದರು. ನಮ್ಮ ಕುಟುಂಬಕ್ಕೆ ಕಾಂಗ್ರೆಸ್ ಪಕ್ಷದೊಂದಿಗೆ ಭಾವನಾತ್ಮಕ ನಂಟಿದೆ ಎಂದು ಹೇಳಿದರು.
2023ರ ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಸಚಿವ ಸ್ಥಾನ ನೀಡುವ ಭರವಸೆ ನೀಡಲಾಗಿತ್ತು. ಇತ್ತೀಚೆಗೆ ಜುಲೈ 31ರಂದು ದೆಹಲಿಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ತಮ್ಮನ್ನು ಸಚಿವರನ್ನಾಗಿ ಮಾಡುವ ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ಕೊನೆಯ ಕ್ಷಣದಲ್ಲಿ ತಮ್ಮ ಹೆಸರನ್ನು ಕೈಬಿಟ್ಟಿದ್ದು ನೋವುಂಟು ಮಾಡಿತ್ತು. ಅವಕಾಶ ತಪ್ಪಿದರೆ ಆ ಕ್ಷಣವೇ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಮೊದಲೇ ಹೇಳಿದ್ದೆ. ಅದಕ್ಕಾಗಿಯೇ ರಾಜೀನಾಮೆ ನೀಡಿದ್ದೆ ಎಂದು ವಿವರಿಸಿದರು.
ಪಕ್ಷದಲ್ಲಿ ಅಸಮಾಧಾನ, ಅತೃಪ್ತಿಗಳು ಸಹಜ. ನನ್ನಂತೆಯೇ ಹಲವು ಹಿರಿಯ ನಾಯಕರಿಗೂ ಸಚಿವ ಸ್ಥಾನ ಸಿಕ್ಕಿಲ್ಲ. ಕೆಲವು ವಿಚಾರಗಳು ಅತ್ಯಂತ ಸೂಕ್ಷ್ಮವಾಗಿವೆ. ಅವುಗಳ ಬಗ್ಗೆ ಬಹಿರಂಗವಾಗಿ ಮಾತನಾಡುವುದಿಲ್ಲ. ವರಿಷ್ಠರ ಮಾತಿಗೆ ಗೌರವ ನೀಡಿ, ಪಕ್ಷದ ನಿರ್ಧಾರವನ್ನು ಒಪ್ಪಿಕೊಳ್ಳುತ್ತೇನೆ ಎಂದರು.
ಮುಖ್ಯಮಂತ್ರಿ ಅವರ ಪರಿಶ್ರಮದಿಂದ ಕಾಂಗ್ರೆಸ್ ಅಽಕಾರಕ್ಕೆ ಬಂದಿದೆ. ರಾಜ್ಯದಲ್ಲಿ ಬರ ಸೇರಿದಂತೆ ಹಲವು ಸವಾಲುಗಳಿವೆ. ಇಂತಹ ಸಂದರ್ಭದಲ್ಲಿ ಸರ್ಕಾರದೊಂದಿಗೆ ನಿಂತು ಕೆಲಸ ಮಾಡುತ್ತೇನೆ ಎಂದು ಅವರು ಹೇಳಿದರು.
ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರ ಸುಮಾರು 4,500 ಕೋಟಿ ಅನುದಾನ ನೀಡಿದೆ. ಅಗತ್ಯವಿರುವ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಂಡಿದ್ದು, ಅನುದಾನದ ವಿಚಾರದಲ್ಲಿ ತಮಗೆ ಯಾವುದೇ ಅಸಮಾಧಾನ ಇಲ್ಲ ಎಂದು ತಿಳಿಸಿದರು.
