ಬೆಂಗಳೂರು,ಜು.11- ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಜಿಲ್ಲಾ ಪಂಚಾಯಿತಿಗಳಿಗೆ ಅಕ್ಟೋಬರ್ -ನವೆಂಬರ್ ಅಂತ್ಯದೊಳಗೆ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಖಾತೆ ಸಚಿವ ಈಶ್ವರ ಖಂಡ್ರೆ ತಿಳಿಸಿದರು.
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗ್ರಾ.ಪಂ.ಗಳ ಚುನಾಯಿತ ಪ್ರತಿನಿಧಿಗಳ ಅಧಿಕಾರಾವಧಿ ಪೂರ್ಣಗೊಂಡಿದ್ದು, ಆಡಳಿತಾಧಿಕಾರಿಗಳಿಂದ ಸ್ಥಳೀಯ ಆಡಳಿತ ನಡೆಸಲಾಗುತ್ತಿದೆ. ಮತ್ತೆ ಚುನಾಯಿತ ಪ್ರತಿನಿಧಿಗಳ ಆಡಳಿತ ನಡೆಯಬೇಕೆಂಬ ನಿಟ್ಟಿನಲ್ಲಿ
ಚುನಾವಣೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದರು.
ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಮಾಡುವ ಕಾರ್ಯ ಆರಂಭವಾಗಿದ್ದು, ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲಾಗುತ್ತದೆ ಎಂದು ಅವರು ಹೇಳಿದರು.
ವಿ.ಬಿ.ಜಿ.ರಾಮ್ ಜಿ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತಂದಿದ್ದು, ಕ್ರಿಯಾಯೋಜನೆಗನುಗುಣವಾಗಿ ಈ ಯೋಜನೆ ಕಾಮಾಗಾರಿಗಳನ್ನು ತೆಗೆದುಕೊಳ್ಳಲಾಗುವುದು. ಈ ಯೋಜನೆಯಡಿ ಹೊಸದಾಗಿ 25 ಕಾಮಗಾರಿಗಳನ್ನು ಸೇರಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
ಕೇಂದ್ರ ಸರ್ಕಾರದಿಂದ 1700 ಕೋಟಿ ರೂ. ಬಂದಿದ್ದು, ಉಳಿದ ಹಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಜನರು ಉದ್ಯೋಗ ಅರಸಿ ಗುಳೇ ಹೋಗುವ ಅವಶ್ಯಕತೆ ಇಲ್ಲ. ಜನರು ವಾಸಿಸುವ ಕಡೆಗಳಲ್ಲೇ ಈ ಯೋಜನೆಯಡಿ ಕೆಲಸ ಕೊಡುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ತಿಳಿಸಿದರು.
ಭರದ ಛಾಯೆ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಆದ್ಯತೆ ನೀಡಲು ನಿರ್ದೇಶನ ನೀಡಿದ್ದು, ಹೊಸದಾಗಿ ಕೊಳವೆ ಬಾವಿ ಕೊರೆಸುವುದು ಹಾಗೂ ಖಾಸಗಿ ಬೋರ್ವೆಲ್ಗಳನ್ನು ಬಾಡಿಗೆ ಪಡೆಯಲು ಸೂಚಿಸಲಾಗಿದ್ದು, ಇದಕ್ಕಾಗಿ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಒಂದು ಕೋಟಿ ರೂ.ಗಳಂತೆ 117 ಕೋಟಿ ರೂ. ಬಿಡುಗಡೆ ಮಾಡಿದ್ದು, ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ವಹಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದರು.
