ಬೆಂಗಳೂರು, ಫೆ.9- ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ವಕ್ತಾರರಾದ ವಿನಯ್ ಕುಮಾರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಆರ್ಸಿಬಿಯ ಪ್ರತಿನಿಧಿಗಳು ಇಂದು ತಮನ್ನು ಭೇಟಿ ಮಾಡಿದ್ದರು.
ಈ ಹಿಂದೆ ಆರ್ಸಿಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಜೀವಹಾನಿಯಾಗಿದೆ. ಆ ಪ್ರಕರಣದ ತನಿಖೆಗೆ ರಚಿಸಲಾಗಿದ್ದ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ವರದಿ ಆಧರಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆಯಲಾಗಿದೆ.
ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರರಾವ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಒಳಗೊಂಡ ಹಿರಿಯ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿತ್ತು. ಅವರು ಕಾಲಕಾಲಕ್ಕೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. ಸುಮಾರು 18 ಅಂಶಗಳನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಈ ನಡುವೆ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳು ಎದುರಾಗಿವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ನಡೆಸಲು ಪೊಲೀಸ್ ಇಲಾಖೆಯ ಪೂರ್ವ ಅನುಮತಿ ದೊರೆತರೆ ಮಾತ್ರ ಪಂದ್ಯಾವಳಿಗಳ ವೇಳಾಪಟ್ಟಿಯಲ್ಲಿ ಬೆಂಗಳೂರು ಸೇರ್ಪಡೆಯಾಗುತ್ತದೆ ಎಂದರು.
ಈ ಹಿನ್ನಲೆಯಲ್ಲಿ ತಾವು ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಆಯುಕ್ತರು ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸುವುದಾಗಿ ಹೇಳಿದರು. ಅನಂತರ ಮುಖ್ಯಮಂತ್ರಿಯವರ ಜೊತೆಯೂ ಚರ್ಚೆ ನಡೆಸಲಾಗುವುದು ಎಂದರು.
ನ್ಯಾಯಮೂರ್ತಿ ಮೈಕಲ್ ಕುನ್ಹಾ ಆಯೋಗದ ಶಿಫಾರಸುಗಳನ್ನು ಯಾವ ಮಟ್ಟಿಗೆ ಈಡೇರಿಸಲಾಗಿದೆ, ಅಳವಡಿಕೆ ಮಾಡಿಕೊಂಡಿರುವ ಸುರಕ್ಷತಾ ಕ್ರಮಗಳೇನು ಎಂಬುದನ್ನು ಸಭೆಯಲ್ಲಿ ಪರಿಶೀಲಿಸಲಾಗುವುದು. ನಂತರ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು. ಜನಸಾಮಾನ್ಯರ ಅಭಿಪ್ರಾಯದಂತೆ ಬೆಂಗಳೂರಿನಲ್ಲಿ ಕ್ರಿಕೆಟ್ ಪಂದ್ಯಾವಳಿಗಳು ನಡೆಯಬೇಕು ಎಂಬುದು ನಮ ಆಸಕ್ತಿ ಕೂಡ ಆಗಿದೆ. ಆದರೆ ಇದರ ನಡುವೆ ಸುರಕ್ಷತೆಯನ್ನು ಕಡೆಗಣಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟ ಪಡಿಸಿದರು.
ಬೆಂಗಳೂರು ದಕ್ಷಿಣ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಬೆಂಗಳೂರನ್ನು ಪ್ರತಿನಿಧಿಸುತ್ತಾರೆ. ಅವರು ನಮ ಪ್ರತಿನಿಧಿ. ರಾಜ್ಯ ಸರ್ಕಾರದ ಖಜಾನೆ ಖಾಲಿ ಎಂದು ಟ್ರಂಕ್ ಹಿಡಿದು ಪ್ರತಿಭಟನೆ ಮಾಡುವ ಮೊದಲು ಕೇಂದ್ರ ಸರ್ಕಾರದಿಂದ ವಿವಿಧ ಬಾಬ್ತುಗಳಲ್ಲಿ ರಾಜ್ಯಕ್ಕೆ ಬರಬೇಕಾದ ಅನುದಾನವನ್ನು ಕೊಡಿಸಲಿ ಎಂದು ಸಲಹೆ ನೀಡಿದರು.
ರಾಜಕೀಯಕ್ಕಾಗಿ ಟೀಕೆ ಮಾಡುವುದು ವ್ಯರ್ಥ ಪ್ರಯತ್ನ. ಕೇಂದ್ರ ಜಿಎಸ್ಟಿಯಲ್ಲಿ ಸಮರ್ಪಕ ಪಾಲು ನೀಡುತ್ತಿಲ್ಲ. ಮೂಲಸೌಕರ್ಯ ಅಭಿವೃದ್ಧಿ, ನೀರಾವರಿ ಯೋಜನೆಗಳಿಗೆ ಸರಿಯಾಗಿ ಹಣ ನೀಡುತ್ತಿಲ್ಲ. ಅದನ್ನು ಕೊಡಿಸುವ ಹೊಣೆಗಾರಿಕೆ ರಾಜ್ಯದ ಪ್ರತಿನಿಧಿಯಾಗಿರುವ ತೇಜಸ್ವಿ ಸೂರ್ಯ ಅವರ ಮೇಲಿದೆ ಎಂಬುದನ್ನು ಮರೆಯಬಾರದು ಎಂದು ತಿರುಗೇಟು ನೀಡಿದರು.
