ಬೆಂಗಳೂರು, ಸೆ.13- ಗೌರಿ-ಗಣೇಶ ಹಬ್ಬದ ಶುಭ ಸಂದರ್ಭದಲ್ಲಿ ಪರಿಸರ ಕಾಳಜಿ ಮೆರೆದಿರುವ ಶಾಸಕ ಕೆ. ಗೋಪಾಲಯ್ಯ ಅವರು ತಮ್ಮ ಗೃಹ ಕಚೇರಿ ಹಾಗೂ ಕ್ಷೇತ್ರದ ವಿವಿಧ ವಾರ್ಡ್ಗಳಲ್ಲಿ ಸಾರ್ವಜನಿಕರಿಗೆ ಉಚಿತವಾಗಿ ಪರಿಸರ ಸ್ನೇಹಿ ಮಣ್ಣಿನ ಗಣಪತಿ ವಿಗ್ರಹಗಳನ್ನು ವಿತರಿಸಿದರು.
ಪರಿಸರ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಾಗೂ ಸಾಂಪ್ರದಾಯಿಕ ಆಚರಣೆಗೆ ಒತ್ತು ನೀಡುವ ಉದ್ದೇಶದಿಂದ ಪ್ರತಿ ವರ್ಷದಂತೆ ಈ ಬಾರಿಯೂ ಸಾವಿರಾರು ಭಕ್ತಾದಿಗಳಿಗೆ, ಸಾರ್ವಜನಿಕರಿಗೆ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಿಸಿ ಶುಭ ಹಾರೈಸಿದರು. ರಾಸಾಯನಿಕ ಬಣ್ಣ ಹಾಗೂ ಪಿಒಪಿ ಬಳಸಿ ತಯಾರಿಸಿದ ಮೂರ್ತಿಗಳ ಬದಲಿಗೆ, ಪರಿಸರ ಸ್ನೇಹಿ ಮಣ್ಣಿನ ಗಣಪತಿ ಪ್ರತಿಷ್ಠಾಪಿಸಿ ಸಂಭ್ರಮದಿಂದ ಹಬ್ಬ ಆಚರಿಸುವಂತೆ ಈ ವೇಳೆ ಶಾಸಕರು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಕ್ಷೇತ್ರದ ಸ್ಥಳೀಯ ಪ್ರಮುಖ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದು, ಸಾರ್ವಜನಿಕರಿಗೆ ಸುಸೂತ್ರವಾಗಿ ಗಣಪತಿ ಮೂರ್ತಿ ವಿತರಿಸುವಲ್ಲಿ ಜೊತೆಯಾದರು. ಶಾಸಕ ಗೋಪಾಲಯ್ಯ ನಾಡಿನ ಜನತೆಗೆ ಗೌರಿ-ಗಣಪತಿ ಹಬ್ಬದ ಹಾರ್ದಿಕ ಶುಭಾಶಯ ತಿಳಿಸಿದರು.
