ಬೆಂಗಳೂರು, ಜು.8- ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಅನುದಾನಿತ ಶಾಲೆಗಳ ಶಿಕ್ಷಕರನ್ನು ಕಡ್ಡಾಯಗೊಳಿಸಿರುವುದರಿಂದ ಕೆಲವು ಶಾಲೆಗಳು ಸಂಕಷ್ಟಕ್ಕೆ ಸಿಲುಕಿವೆ ಎಂದು ಖಾಸಗಿ ಶಾಲಾ ಸಂಘಟನೆಗಳು ಅಸಮಾಧಾನ ವ್ಯಕ್ತಪಡಿಸಿವೆ.
ಬಿಇಒ ಹಾಗೂ ಚುನಾವಣಾ ಅಧಿಕಾರಿಗಳು ಅನುದಾನಿತ ಶಾಲೆಗಳ ಶಿಕ್ಷಕರು ಕಡ್ಡಾಯವಾಗಿ ಕಾರ್ಯದಲ್ಲಿ ಭಾಗವಹಿಸುವಂತೆ ಸೂಚನೆ ನೀಡಿದ್ದು, ಶಿಕ್ಷಕರನ್ನು ಕರ್ತವ್ಯಕ್ಕೆ ಕಳುಹಿಸದಿದ್ದರೆ ಎಫ್ಐಆರ್ ದಾಖಲಿಸುವುದು ಸೇರಿದಂತೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಶಾಲಾ ಆಡಳಿತ ಮಂಡಳಿಗಳು ಆರೋಪಿಸಿವೆ.
ಇನ್ನೊಂದೆಡೆ, ಶಿಕ್ಷಣ ಇಲಾಖೆ ಶಾಲೆಗಳಲ್ಲಿ ನಿಯಮಿತವಾಗಿ ತರಗತಿಗಳನ್ನು ನಡೆಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಈ ಎರಡು ಇಲಾಖೆಗಳ ವಿರುದ್ಧಾಭಾಸದ ಆದೇಶಗಳಿಂದ ಅನುದಾನಿತ ಶಾಲೆಗಳು ದಿಕ್ಕುತೋಚದ ಸ್ಥಿತಿಗೆ ತಲುಪಿವೆ ಎಂದು ಶಾಲಾ ಆಡಳಿತ ಮಂಡಳಿಗಳು ಹೇಳಿವೆ.
ಶಿಕ್ಷಕರನ್ನು ಚುನಾವಣಾ ಕರ್ತವ್ಯಕ್ಕೆ ಕಳುಹಿಸಿದರೆ ಶಾಲೆಗಳಲ್ಲಿ ಬೋಧನೆಗೆ ಅಡಚಣೆಯಾಗುತ್ತದೆ. ವಿದ್ಯಾರ್ಥಿಗಳ ಕಲಿಕೆಗೆ ಹಾನಿಯಾಗುವುದರ ಜೊತೆಗೆ ಪೋಷಕರಿಂದ ದೂರುಗಳು ಬರುತ್ತಿವೆ. ಮತ್ತೊಂದೆಡೆ ಶಿಕ್ಷಕರನ್ನು ಶಾಲೆಯಲ್ಲೇ ಉಳಿಸಿಕೊಂಡರೆ ಚುನಾವಣಾ ಅಧಿಕಾರಿಗಳು ಕಾನೂನು ಕ್ರಮದ ಬೆದರಿಕೆ ಹಾಕುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕ್ಯಾಮ್ಸೌ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು, ಶಿಕ್ಷಣ ಇಲಾಖೆ ಮತ್ತು ಚುನಾವಣಾ ಇಲಾಖೆ ಪರಸ್ಪರ ಸಮನ್ವಯ ಸಾಧಿಸಿ ಶಾಲೆಗಳ ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
