ಬೆಂಗಳೂರು, ಮೇ 30- ಕಾಂಗ್ರೆಸ್ ನಲ್ಲಿ ಒಬ್ಬ ವ್ಯಕ್ತಿ ಒಂದು ಹುದ್ದೆ ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ. ನಾಳೆಯ ವೇಳೆಗೆ ಎಲ್ಲವೂ ನಿರ್ಧಾರವಾಗಲಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ಖಚಿತವಾಗಿದೆ. ಹಾಗಾಗಿ ಅವರು ರಾಜ್ಯಪಾಲರನ್ನು ಭೇಟಿ ಮಾಡಿ ಪ್ರಮಾಣವಚನ ಸ್ವೀಕಾರ ಹಾಗೂ ಇತರ ವಿಚಾರಗಳ ಕುರಿತು ಚರ್ಚಿಸಬಹುದು ಎಂದು ಹೇಳಿದರು.
ಕೆಪಿಸಿಸಿ ಆಧ್ಯಕ್ಷ ಸ್ಥಾನಕ್ಕೆ ತಮ ಹೆಸರಿನಂತೆ, ಮಾಜಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೆಸರು ಕೇಳಿ ಬರುತ್ತಿದೆ. ಬಹುಶಃ ನಾಳೆಯ ಒಳಗೆ ಎಲ್ಲವೂ ಬಗೆಹರಿಯಲಿದೆ. ಹೈಕಮಾಂಡ್ ಎರಡು ಮೂರು ಹೆಸರುಗಳನ್ನು ಪರಿಶೀಲಿಸಿ, ಸೂಕ್ತವಾದವರನ್ನು ಆಯ್ಕೆ ಮಾಡಿಕೊಳ್ಳಲಿದೆ ಎಂದು ಹೇಳಿದರು.
ಸಂಪುಟದಿಂದ ಹಿರಿಯರನ್ನು ಕೈ ಬಿಡುವ ಬಗ್ಗೆ ಏನು ಚರ್ಚೆ ನಡೆದಿದೆ ಎಂದು ಗೊತ್ತಿಲ್ಲ. ಆದರೆ ಸಂಪುಟಕ್ಕೆ ಹಳಬರು ಮತ್ತು ಹೊಸಬರು ಎರಡು ಆಯಾಮದಲ್ಲೂ ನೇಮಕವಾಗಬೇಕು. ಹೊಸಬರನ್ನೇ ಇಟ್ಟುಕೊಂಡು ಸರ್ಕಾರ ನಡೆಸಲಾಗುವುದಿಲ್ಲ ಎಂದು ಹೇಳಿದರು.
ಉಪಮುಖ್ಯಮಂತ್ರಿ ಹುದ್ದೆಗಳು ಬೇಕೋ ಬೇಡವೋ ಎಂಬುದು ಇನ್ನೂ ನಿರ್ಧಾರವಾಗಿಲ್ಲ. ಎಲ್ಲವೂ ಚರ್ಚೆಯ ಹಂತದಲ್ಲಿದೆ. ಹೈಕಮಾಂಡ್ನ ನಾಯಕರು ಬೆಂಗಳೂರಿಗೆ ಬಂದು ಚರ್ಚಿಸಿದ ಬಳಿಕ ನಿರ್ಧರಿಸುತ್ತಾರೆ ಎಂದು ಹೇಳಿದರು.
ಸಚಿವರ ಉಪಾಹಾರ ಕೂಟದ ಬಳಿಕ ನಾನು ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿಲ್ಲ. ನಿನ್ನೆ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚೆ ಮಾಡಿದ್ದೇನೆ ಎಂದರು.
ತಮಗೆ ಸಾಮರ್ಥ್ಯ ಇದೆ, ಸಂಪುಟದಲ್ಲಿ ಅವಕಾಶ ಕೊಡಿ ಎಂದು ಎಲ್ಲರೂ ಕೇಳುತ್ತಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಹೇಳಿದರು.
