ಬೆಂಗಳೂರು,ಡಿ.16- ಕೇಂದ್ರದ ಬೃಹತ್ ಕೈಗಾರಿಕೆ ಹಾಗೂ ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಶುಭಾಶಯ ಕೋರಿದ್ದಾರೆ.ನನ್ನ ಹುಟ್ಟು ಹಬ್ಬದ ಸಂದರ್ಬದಲ್ಲಿ ಮೋದಿ ಅವರ ಶುಭಾಶಯ ಹಾಗೂ ಶುಭಾಶೀರ್ವಾದದಿಂದ ನಾನು ಭಾವುಕನಾಗಿದ್ದೇನೆ ಮತ್ತು ವಿನೀತನಾಗಿದ್ದೇನೆ. ಅವರ ಪಿತೃವಾತ್ಸಲ್ಯಕ್ಕೆ ನಾನು ಧನ್ಯನಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಧಾನಿಗಳ ಚಿಂತನಶೀಲ ಮಾರ್ಗದರ್ಶನ, ಪ್ರೋತ್ಸಾಹ ಮತ್ತು ನನ್ನ ಮೇಲಿನ ನಂಬಿಕೆಗೆ ನಾನು ಚಿರಋಣಿ ಆಗಿದ್ದೇನೆ ಎಂದಿದ್ದಾರೆ. ಪ್ರಧಾನಮಂತ್ರಿಗಳ ಶುಭಾಶೀರ್ವಾದ ಮತ್ತು ಸಂದೇಶವು, ಸಾರ್ವಜನಿಕ ಸೇವೆಯು ಕೇವಲ ಒಂದು ಜವಾಬ್ದಾರಿಯಲ್ಲ, ಬದಲಿಗೆ ರಾಷ್ಟ್ರ, ಸಮಾಜ ಮತ್ತು ಸಾರ್ವಜನಿಕರ ಕಲ್ಯಾಣಕ್ಕಾಗಿ ಜೀವಮಾನದ ಅನನ್ಯ ಸಮರ್ಪಣೆಯಾಗಿದೆ ಎಂಬುದನ್ನು ನೆನಪಿಸುತ್ತದೆ.
ಸಮರ್ಪಣೆ, ಪರಿಶ್ರಮ ಮತ್ತು ನಿಸ್ವಾರ್ಥ ಸೇವೆಯ ಬಗ್ಗೆ ಅವರ ಮೆಚ್ಚುಗೆಯು ನನ್ನನ್ನು ಮತ್ತಷ್ಟು ಉತ್ತೇಜಿಸಿದೆ ಹಾಗೂ ರಾಷ್ಟ್ರಸೇವೆಗೆ ಸಮರ್ಪಿಸಿಕೊಳ್ಳಲು ಪ್ರೇರೇಪಣೆ ನೀಡಿದೆ ಎಂದು ಅವರು ಹೇಳಿದ್ದಾರೆ.
ನನ್ನನ್ನು ಹರಸಿ ಆಶೀರ್ವದಿಸಿದ ಮಾನ್ಯ ಪ್ರಧಾನಿಗಳಿಗೆ ಕೃತಜ್ಞನಾಗಿದ್ದೇನೆ. ನನ್ನ ಮೇಲೆ ಅವರು ಇರಿಸಿರುವ ನಂಬಿಕೆಗೆ ನಾನು ಋಣಿಯಾಗಿದ್ದೇನೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.
