ಬಳ್ಳಾರಿ,ಜ.2- ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಬೆಂಬಲಿಗರ ನಡುವಿನ ಘರ್ಷಣೆ ಬಳಿಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದು ಹೆಚ್ಚುವರಿ ಭದ್ರತೆ ನಿಯೋಜಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇಂದು ಬಳ್ಳಾರಿಯಲ್ಲಿ ಪರಿಸ್ಥಿತಿ ಶಾಂತವಾಗಿದ್ದರೂ, ಬೂದಿ ಮುಚ್ಚಿದ ಕಂಡದಂತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ವಿಡಿಯೋಗಳಲ್ಲಿ ಉದ್ವಿಗ್ನತೆ ಉಂಟಾಗುತ್ತಿದ್ದಂತೆ ಖಾಸಗಿ ಬಂದೂಕುಧಾರಿ ಗಾಳಿಯಲ್ಲಿ ಗುಂಡು ಹಾರಿಸುತ್ತಿರುವುದು ಕಂಡುಬಂದಿದೆ.
ನಗರದಲ್ಲಿ ಜ.3ರಂದು ವಾಲೀಕಿ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೂ ಮುನ್ನ ಈ ಘರ್ಷಣೆ ನಡೆದಿದೆ ಎಂದು ಮಾಹಿತಿ ನೀಡಿದ್ದಾರೆ.ಪೊಲೀಸರ ಪ್ರಕಾರ, ಭರತ್ ರೆಡ್ಡಿ ಬೆಂಬಲಿಗರು ಅವಂಭವಿ ಪ್ರದೇಶದಲ್ಲಿರುವ ಜನಾರ್ದನ ರೆಡ್ಡಿ ಅವರ ನಿವಾಸದ ಮುಂದೆ ಬ್ಯಾನರ್ಗಳನ್ನು ಅಳವಡಿಸಲು ಪ್ರಯತ್ನಿಸುತ್ತಿದ್ದರು. ಇದನ್ನು ಅವರ ಬೆಂಬಲಿಗರು ವಿರೋಧಿಸಿದ್ದರು. ಇದು ತೀವ್ರ ವಾಗ್ವಾದ ಉಂಟು ಮಾಡಿ ಘರ್ಷಣೆಗೆ ಕಾರಣವಾಯಿತು. ಎರಡೂ ಕಡೆಯ ಬೆಂಬಲಿಗರು ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಸ್ಥಳಕ್ಕೆ ಧಾವಿಸಿದ ಪೊಲೀಸ್ ಸಿಬ್ಬಂದಿಗಳ ಮೇಲೂ ಕಲ್ಲು ತೂರಾಟ ನಡೆದಿದೆ.
ಘಟನೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ಗಾಯಗೊಂಡವರ ಸಂಖ್ಯೆ ಮತ್ತು ಗುರುತುಗಳನ್ನು ಪರಿಶೀಲಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣ ತಪ್ಪುತ್ತಿರುವುದನ್ನು ಕಂಡು ಪೊಲೀಸರು ಲಾಠಿಚಾರ್ಜ್ ನಡೆಸಿದರು ಮತ್ತು ಗುಂಪನ್ನು ಚದುರಿಸಲು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.ಘಟನೆಗಳ ಅನುಕ್ರಮವನ್ನು ಖಚಿತಪಡಿಸಿಕೊಳ್ಳಲು ಮತ್ತು ಆರೋಪಗಳನ್ನು ಪರಿಶೀಲಿಸಲು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
