ಬೆಂಗಳೂರು,ಡಿ.21-ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪೋಲಿಯೋ ಮುಕ್ತ ರಾಷ್ಟ್ರ ಎಂದು ಮತ್ತೊಮೆ ಸಾಬೀತು ಮಾಡೋಣ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಅವರು ತಿಳಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ದೇವನಹಳ್ಳಿಯ ತಾಲ್ಲೂಕಿನ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಪೋಷಕರು ಯಾವುದೇ ಭಯವಿಲ್ಲದೆಯೇ ಮಕ್ಕಳಿಗೆ ಪೋಲಿಯೋ ಹನಿಯನ್ನು ತಪ್ಪದೇ ಹಾಕಿಸುವ ಮೂಲಕ ಮಕ್ಕಳನ್ನು ಅಂಗವೈಕಲ್ಯದಿಂದ ಪಾರುಮಾಡಿ. ಪೋಲಿಯೋ ಹನಿ ಪಡೆಯದ ಯಾವ ಮಗುವೂ ಸುರಕ್ಷಿತವಲ್ಲ ಎಂಬ ಅಂಶವನ್ನು ಪೋಷಕರು ಮನಗಾಣಬೇಕು ಎಂದರು.
ಇಂದಿನಿಂದ ಡಿಸೆಂಬರ್ 24 ರವರೆಗೆ 2025ನೇ ಸಾಲಿನ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮಿಕೊಂಡಿದ್ದು, ಜಿಲ್ಲೆಯಲ್ಲಿ 5 ವರ್ಷದೊಳಗಿನ ಒಟ್ಟು 99828 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜಿಲ್ಲೆಯಲ್ಲಿ ಒಟ್ಟು 1374 ಕಠಿಣ ಪ್ರದೇಶಗಳನ್ನು ಗುರುತಿಸಲಾಗಿದ್ದು, ಇವುಗಳ ಮೇಲೆ ಹೆಚ್ಚು ನಿಗಾವಹಿಸಿ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ಯಾವುದೇ ಕಾರಣಕ್ಕೂ ಪೋಲಿಯೋ ಲಸಿಕೆಯಿಂದ ವಂಚಿತ ಆಗದಂತೆ ಕ್ರಮವಹಿಸಲಾಗಿದೆ ಎಂದು ಅವರು ಹೇಳಿದರು.
ಎಲ್ಲಾ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗಳಲ್ಲಿ, ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಉಪಕೇಂದ್ರಗಳಲ್ಲಿ, ಶಾಲೆಗಳಲ್ಲಿ/ಅಂಗನವಾಡಿ ಕೇಂದ್ರಗಳಲ್ಲಿ ಉಚಿತವಾಗಿ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗುತ್ತಿದೆ. ಜಿಲ್ಲೆಯಾದ್ಯಂತ ಒಟ್ಟು 476 ಬೂತ್ಗಳ ಜೊತೆಗೆ 85 ಟ್ರಾನ್ಸಿಟ್ ತಂಡಗಳ ವ್ಯವಸ್ಥೆ ಮಾಡಲಾಗಿದ್ದು, ಮಕ್ಕಳಿಗೆ ಲಸಿಕೆ ಹಾಕಲು ಒಟ್ಟು 2148 ಲಸಿಕಾದಾರರನ್ನು ನಿಯೋಜಿಸಲಾಗಿದೆ. ಇದರ ಮೇಲ್ವಿಚಾರಣೆಗಾಗಿ ಒಟ್ಟು 106 ಮೇಲ್ವಿಚಾರಕರನ್ನು ನೇಮಿಸಿದ್ದು, ಜಿಲ್ಲೆಯಲ್ಲಿ ಗ್ರಾಮೀಣ/ನಗರ ಪ್ರದೇಶದ ಒಟ್ಟು 2,80,986 ಮನೆಗಳಿಗೆ ಭೇಟಿ ನೀಡಿ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಬಿ.ರಾಜಣ್ಣ, ಬಯಪ್ಪ ಅಧ್ಯಕ್ಷ ವಿ. ಶಾಂತಕುಮಾರ್, ಬಯಪ್ಪ ನಿರ್ದೇಶಕ ಪ್ರಸನ್ನಕುಮಾರ್, ಪುರಸಭೆ ಅಧ್ಯಕ್ಷ ಡಿ.ಎಂ.ಮುನಿಕೃಷ್ಣ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಲಕ್ಕಾ ಕೃಷ್ಣಾರೆಡ್ಡಿ, ಜಿಲ್ಲಾ ಆರ್.ಸಿ.ಹೆಚ್.ಅಧಿಕಾರಿ ಸೀಮಾ ರುದ್ರಪ್ಪ ಮಾಬಳೆ, ದೇವನಹಳ್ಳಿ ತಹಶೀಲ್ದಾರ್ ಅನಿಲ್, ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತರು ಉಪಸ್ಥಿತರಿದ್ದರು.
