ಬೆಂಗಳೂರು,ಏ.3- ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಜಾರಿಯಾಗುವಂತೆ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ನೀಡದೆ ಕೇವಲ ಗ್ರೇಡ್ಗಳನ್ನು ಮಾತ್ರ ನೀಡುವ ಇತ್ತೀಚಿನ ರಾಜ್ಯ ಸರ್ಕಾರದ ನಿರ್ಧಾರವನ್ನು ಮರು ಪರಿಶೀಲನೆ ಮಾಡಬೇಕು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಪತ್ರ ಬರೆದಿದ್ದಾರೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ವಿಶೇಷ ಕಾರ್ಯದರ್ಶಿ ಆರ್.ಪ್ರಭುಶಂಕರ್ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಒಂದು ಪುಟಗಳ ಪತ್ರ ಬರೆದಿದ್ದು, ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳನ್ನು ಸೇರಿಸದೆ ಕೇವಲ ಶ್ರೇಣಿಗಳನ್ನು ನೀಡುವ ಇತ್ತೀಚಿನ ನಿರ್ಧಾರದ ಕುರಿತು ಬೆಂಗಳೂರಿನ ಸ್ಥಳೀಯ ಭಾಷೆಗಳ ಸಂರಕ್ಷಣಾ ಸಂಘವು ಸಲ್ಲಿಸಿದ ಮನವಿಯ ಪ್ರತಿಯನ್ನು ರಾಜ್ಯಪಾಲರ ನಿರ್ದೇಶನದಂತೆ ನಿಮಗೆ ಕಳುಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.
ವಿದ್ಯಾರ್ಥಿಗಳಲ್ಲಿ ಭಾಷಾ ವೈವಿಧ್ಯತೆ, ಜಾಗೃತಿ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಬೆಳೆಸುವಲ್ಲಿ ತೃತೀಯ ಭಾಷೆಯು ಪ್ರಮುಖ ಪಾತ್ರ ವಹಿಸುತ್ತದೆ. ಅಂಕಗಳ ಬದಲಾಗಿ ಕೇವಲ ಗ್ರೇಡ್ಗಳನ್ನು ನೀಡುವ ಪ್ರಸ್ತಾವಿತ ವ್ಯವಸ್ಥೆಯು ಅಜಾಗರೂಕತೆಯಿಂದ ವಿಷಯದ ಶೈಕ್ಷಣಿಕ ಪ್ರಾಮುಖ್ಯತೆಯನ್ನು ಕಡಿಮೆ ಮಾಡಬಹುದು. ವಿದ್ಯಾರ್ಥಿಗಳು ಇದನ್ನು ಗಂಭೀರವಾಗಿ ಕಲಿಯುವ ಆಸಕ್ತಿಯ ಮೇಲೆ ಪರಿಣಾಮ ಬೀರಬಹುದು ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ ಶಾಲಾ ಶಿಕ್ಷಣದ ಒಟ್ಟಾರೆ ಗುಣಮಟ್ಟ ಮತ್ತು ಒಳಗೊಳ್ಳುವಿಕೆಯ ಮೇಲೆ ಅಂತಹ ನೀತಿ ನಿರ್ಧಾರದ ದೀರ್ಘಕಾಲೀನ ಪರಿಣಾಮಗಳ ಬಗ್ಗೆ ಶಿಕ್ಷಕರು ಮತ್ತು ಶಿಕ್ಷಣ ತಜ್ಞರಲ್ಲಿ ಆತಂಕಗಳನ್ನು ಪ್ರತಿಬಿಂಬಿಸುತ್ತವೆ. ಪ್ರಾತಿನಿಧ್ಯದಲ್ಲಿ ಎತ್ತಲಾದ ಸಮಸ್ಯೆಗಳನ್ನು ಗೌರವಾನ್ವಿತ ರಾಜ್ಯಪಾಲರು ಗಮನಿಸಿದ್ದಾರೆ ಮತ್ತು ಶಿಕ್ಷಣ ಕ್ಷೇತ್ರದಾದ್ಯಂತ ಅದರ ಶೈಕ್ಷಣಿಕ ಮತ್ತು ಆಡಳಿತಾತಕ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಈ ವಿಷಯವನ್ನು ಸಮಗ್ರವಾಗಿ ಪರಿಶೀಲಿಸಬೇಕೆಂದು ಬಯಸುತ್ತಾರೆ ಎಂದು ಪತ್ರದಲ್ಲಿ ವಿವರಿಸಲಾಗಿದೆ.
ಆದುದರಿಂದ ಈ ವಿಷಯವನ್ನು ಶಾಲಾ ಶಿಕ್ಷಣ ಇಲಾಖೆ ಮತ್ತು ಇತರ ಸಂಬಂಧಿತ ಅಧಿಕಾರಿಗಳೊಂದಿಗೆ ಸಮಾಲೋಚಿಸಿ ಪರಿಶೀಲಿಸಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಹಾಗೂ ರಾಜ್ಯದ ಶೈಕ್ಷಣಿಕ ಉದ್ದೇಶಗಳಿಗೆ ಅನುಗುಣವಾಗಿ ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅವರಿಗೆ ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಆರ್ .ಪ್ರಭುಶಂಕರ್ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಏನಿದು ವಿವಾದ ? :
ಕಳೆದ ವಾರ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮಹತ್ವದ ಬದಲಾವಣೆ ತಂದಿತ್ತು. ತೃತೀಯ ಭಾಷೆಯನ್ನು ಗ್ರೇಡ್ಗೆ ಸೀಮಿತಗೊಳಿಸಲಾಗಿತ್ತು. ಈ ಮೂಲಕ ಒಟ್ಟು 625 ಅಂಕಗಳಿಗೆ ಬದಲಾಗಿ 525 ಅಂಕಕ್ಕೆ ಫಲಿತಾಂಶ ನೀಡಲಾಗುತ್ತದೆ. ಒಟ್ಟು ಅಂಕಗಳಲ್ಲಿ ಭಾರೀ ಕಡಿತವಾಗಲಿದ್ದು, ತೃತೀಯ ಭಾಷೆಯ ಅಂಕಗಳನ್ನು ಫಲಿತಾಂಶಕ್ಕೆ ಪರಿಗಣಿಸದಿರಲು ತೀರ್ಮಾನಿಸಲಾಗಿದೆ. ಇದುವರೆಗೆ 625 ಅಂಕಗಳಿಗೆ ನಡೆಯುತ್ತಿದ್ದ ಪರೀಕ್ಷೆಯನ್ನು ಈಗ 525 ಅಂಕಗಳಿಗೆ ಸೀಮಿತಗೊಳಿಸಲಾಗಿದೆ.
ತೃತೀಯ ಭಾಷೆಯಾದ ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು, ಮರಾಠಿ ಇತ್ಯಾದಿ ಅಂಕಗಳನ್ನು ಒಟ್ಟು ಫಲಿತಾಂಶಕ್ಕೆ ಪರಿಗಣಿಸಲಾಗುವುದಿಲ್ಲ. ಬದಲಾಗಿ, ತೃತೀಯ ಭಾಷೆಯಲ್ಲಿ ವಿದ್ಯಾರ್ಥಿಗಳು ಗಳಿಸುವ ಅಂಕಗಳ ಆಧಾರದ ಮೇಲೆ ಗ್ರೇಡ್ಗಳನ್ನು ನೀಡಲಾಗುತ್ತದೆ. ಆದರೆ, ವಿದ್ಯಾರ್ಥಿಗಳು ಮಾರ್ಚ್ 31ರಂದು ನಡೆಯಲಿರುವ ಈ ಪರೀಕ್ಷೆಗೆ ಹಾಜರಾಗುವುದು ಕಡ್ಡಾಯವಾಗಿದೆ.
ರಾಜ್ಯದಲ್ಲಿ ಸದ್ಯಕ್ಕೆ ತ್ರಿಭಾಷಾ ನೀತಿಯೇ ಮುಂದುವರಿಯಲಿದೆ. ಎಸ್ಎಸ್ಎಲ್ಸಿ ವಿದ್ಯಾರ್ಥಿಗಳ ಮೇಲಿನ ಒತ್ತಡ ಕಡಿಮೆ ಮಾಡಲು ಶಿಕ್ಷಣ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಸದ್ಯಕ್ಕೆ ಈ ನಿಯಮ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯಿಸಲಿದೆ. ಇದುವರೆಗೆ ವಿದ್ಯಾರ್ಥಿಗಳು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಆದರೆ ಇನ್ನುಮುಂದೆ ತೃತೀಯ ಭಾಷೆಯ 100 ಅಂಕಗಳನ್ನು ಒಟ್ಟು ಅಂಕಪಟ್ಟಿಯಲ್ಲಿ ಸೇರಿಸಲಾಗುವುದಿಲ್ಲ.
ಆದಾಗ್ಯೂ, ಹಿಂದಿನಂತೆ ಆ ವಿಷಯಕ್ಕೆ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕಿದ್ದು, ಅದರ ಫಲಿತಾಂಶವನ್ನು ಅಂಕಗಳ ಬದಲು ಗ್ರೇಡ್ ರೂಪದಲ್ಲಿ ಅಂಕಪಟ್ಟಿಯಲ್ಲಿ ನಮೂದಿಸಲಾಗುತ್ತದೆ. ಸರ್ಕಾರದ ಈ ಕ್ರಮಕ್ಕೆ ಸಾರ್ವಜನಿಕ ಹಾಗೂ ಪೋಷಕರ ವಲಯದಲ್ಲಿ ಪರ- ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ.
