ಬೆಂಗಳೂರು,ಮಾ.13- ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜು ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕಾಗಿದ್ದು ನಿಜ. ಮುಂದಿನ ದಿನಗಳಲ್ಲಿ ಪ್ರಶಸ್ತಿ ಆಯ್ಕೆ ಸಮಿತಿ ಆ ಬಗ್ಗೆ ತೀರ್ಮಾನ ಮಾಡಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ವಿಧಾನಪರಿಷತ್ನಲ್ಲಿಂದು ತಿಳಿಸಿದರು.
ಶೂನ್ಯವೇಳೆಯಲ್ಲಿ ಶಾಸಕ ರಮೇಶ್ಬಾಬು ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ವಾಟಾಳ್ ನಾಗರಾಜು ಅವರು ಹಿರಿಯರಿದ್ದು, ಕನ್ನಡಪರ ಹೋರಾಟ ಮಾಡುತ್ತಾ ಬಂದಿದ್ದಾರೆ. ಈಗಾಗಲೇ ಕನ್ನಡಪರ ಸಂಘಟನೆಗಳ ಮೇಲೆ ವಿಧಿಸಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆಯೂ ಚರ್ಚೆಯಾಗಿದ್ದು, ಗೃಹಸಚಿವ ಡಾ.ಜಿ.ಪರಮೇಶ್ವರ್ ಅವರ ನೇತೃತ್ವದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿ ತೀರ್ಮಾನ ಮಾಡಲಿದೆ. ಕನ್ನಡಪರ ಸಂಘಟನೆಗಳಿಗೆ ನಿವೇಶನ ನೀಡುವ ವಿಚಾರದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗುವುದು ಎಂದರು.
ಇದಕ್ಕೂ ಮುನ್ನ ವಿಷಯ ಪ್ರಸ್ತಾಪಿಸಿದ ರಮೇಶ್ಕುಮಾರ್, ವಾಟಾಳ್ ನಾಗರಾಜ್ರಂತಹ ಅನೇಕ ಮಹನೀಯರು ಕನ್ನಡ ಜಲ ನೆಲದ ವಿಷಯವಾಗಿ ನಿರಂತರ ಹೋರಾಟ ಮಾಡಿದ್ದಾರೆ. ಅಂತವರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವುದು ಅವಶ್ಯಕವಾಗಿದೆ. ಕನ್ನಡಪರ ಚಳವಳಿಗಾರರು ಹೋರಾಟಗಾರರಿಗೆ ವಿಧಿಸಿರುವ ಮೊಕದ್ದಮೆಗಳನ್ನು ವಾಪಸ್ ಪಡೆಯಬೇಕು ಹಾಗೂ ಕನ್ನಡ ಪರ ಸಂಘ ಸಂಸ್ಥೆಗಳಿಗೆ ನಿವೇಶನ ಒದಗಿಸಬೇಕು ಎಂದು ಕೋರಿದರು.
