ಬೆಂಗಳೂರು,ಫೆ.27- ರಾಜ್ಯದಲ್ಲಿ ಕೇಂದ್ರ ಸರ್ಕಾರದ ಕಾರ್ಖಾನೆಗಳು ಪ್ರಾರಂಭವಾಗಲು ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ.ರೆಡ್ಡಿ ಅವರು ಪ್ರಮುಖ ಪಾತ್ರ ವಹಿಸಿದ್ದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
ಕೆ.ಸಿ.ರೆಡ್ಡಿ ಅವರ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸ್ವತಂತ್ರ ಭಾರತದ ರಾಜ್ಯದ ಮೊದಲ ಮುಖ್ಯಮಂತ್ರಿಯಾಗಿದ್ದ ಕೆ.ಸಿ.ರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹಲವು ಬಾರಿ ಸೆರೆವಾಸ ಅನುಭವಿಸಿದ್ದರು.
ಮೈಸೂರು ಸಂಸ್ಥಾನವನ್ನು ಒಕ್ಕೂಟ ವ್ಯವಸ್ಥೆಗೆ ಸೇರಿಸಲು ಶ್ರಮಿಸಿದ್ದರು ಎಂದು ಬಣ್ಣಿಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ರಾಜ್ಯಪಾಲರಾಗಿ ಬಹಳಷ್ಟು ಸೇವೆಯನ್ನು ಸಲ್ಲಿಸಿದ್ದಾರೆ. ಅವರು ಪ್ರಾಮಾಣಿಕ ವ್ಯಕ್ತಿಯಾಗಿದ್ದರು. ಅವರು ಹಾಕಿಕೊಟ್ಟ ಮೇಲ್ಪಂಕ್ತಿಯಲ್ಲಿ ಅವರ ಮಾರ್ಗದರ್ಶನದಂತೆ ಎಲ್ಲರೂ ನಡೆಯೋಣ ಎಂದು ಹೇಳಿದರು.
