ಬೆಂಗಳೂರು, ಮೇ 29- ದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಈವರೆಗಿನ ಎಲ್ಲಾ ಅವಕಾಶಗಳಿಗಾಗಿ ಧನ್ಯವಾದ ಹೇಳಿದ್ದಾರೆ.
ನಿನ್ನೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಿ, ದೆಹಲಿಗೆ ತೆರಳಿದರು. ಇಂದು ಬೆಳಗ್ಗೆ ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೆಟಿ ಮಾಡಿದ್ದರು. ಈ ಭೇಟಿ ಭಾವನಾತಕವಾಗಿತ್ತು. ಖರ್ಗೆ ಅವರು ಸಿದ್ದರಾಮಯ್ಯ ಅವರ ಭುಜ ತಟ್ಟಿ, ಕೊಟ್ಟ ಮಾತಿನಂತೆ ನಡೆದುಕೊಂಡಿದ್ದಕ್ಕಾಗಿ ಶ್ಲಾಘಿಸಿದ್ದಾರೆ.
ಸಿದ್ದರಾಮಯ್ಯ ಅವರು ಭಾವೋದ್ವೇಗದಿಂದಲೇ ಖರ್ಗೆ ಅವರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಾಜಿ ಸಚಿವರಾದ ಕೆ.ಜೆ.ಜಾರ್ಜ್, ಪ್ರಿಯಾಂಕ್ ಖರ್ಗೆ, ವಿಧಾನ ಪರಿಷತ್ತಿನ ಸದಸ್ಯ ಡಾ.ಯತೀಂದ್ರ ಈ ವೇಳೆ ಉಪಸ್ಥಿತರಿದ್ದರು.ನಂತರ 10 ಜನಪಥ್ ರಸ್ತೆಯಲ್ಲಿರುವ ಸೋನಿಯಾ ಗಾಂಧಿ ಅವರ ನಿವಾಸಕ್ಕೆ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಹಾಜರಿದ್ದರು.
ಸೋನಿಯಾ ಗಾಂಧಿಯವರೊಂದಿಗೆ ಮಾತುಕತೆ ಮುಗಿಸಿ, ಹೊರ ಬಂದಾಗ ರಾಹುಲ್ ಗಾಂಧಿಯವರು ಕಾರಿನವರೆಗೂ ಬಂದು ಬೀಳ್ಕೊಟ್ಟರು. ಸಿದ್ದರಾಮಯ್ಯ ಅವರನ್ನು ಅಪ್ಪಿ ಅಭಿನಂದನೆ ಸಲ್ಲಿಸಿದ್ದಾರೆ. ಇದು ಮತ್ತಷ್ಟು ಭಾವನಾತಕ ಸನ್ನಿವೇಶ ಸೃಷ್ಟಿಸಿತ್ತು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿ ಮಾಡಿ, ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ. ನಿನ್ನೆ ಬೆಂಗಳೂರಿನಲ್ಲೇ ಇದ್ದ ಮತ್ತೊಬ್ಬ ಪ್ರಧಾನ ಕಾರ್ಯದರ್ಶಿ ರಣದೀಪ್ಸಿಂಗ್ ಸುರ್ಜೇವಾಲ ಅವರು ಖುದ್ದಾಗಿ ಸಿದ್ದರಾಮಯ್ಯ ಅವರನ್ನು ವಿಶೇಷ ವಿಮಾನದಲ್ಲಿ ದೆಹಲಿಗೆ ಕರೆದುಕೊಂಡು ಹೋಗಿದ್ದರು.
ದೆಹಲಿಯಲ್ಲೇ ಇರುವ ಡಿ.ಕೆ.ಶಿವಕುಮಾರ್ ಅವರೊಂದಿಗೆ ಸಿದ್ದರಾಮಯ್ಯ ಇಂದು ಚರ್ಚೆ ನಡೆಸಿದ್ದು, ನಾಳೆ ಶಾಸಕಾಂಗ ಸಭೆ ನಡೆಸಲು ನಿರ್ಧರಿಸಿದ್ದಾರೆ. ಈ ವೇಳೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಉಪಸ್ಥಿತರಿದ್ದರು.ಇಂದು ಮಧ್ಯಾಹ್ನ 3 ಗಂಟೆಗೆ ದೆಹಲಿಯಿಂದ ಪಯಣ ಆರಂಭಿಸಲಿರುವ ಸಿದ್ದರಾಮಯ್ಯ ಸಂಜೆ 5.30ಕ್ಕೆ ಬೆಂಗಳೂರಿಗೆ ಮರಳಲಿದ್ದಾರೆ.
