Tuesday, January 6, 2026
Homeರಾಜ್ಯಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ : ಮೂವರು ಅಪ್ರಾಪ್ತರ ವಿಚಾರಣೆ

ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ : ಮೂವರು ಅಪ್ರಾಪ್ತರ ವಿಚಾರಣೆ

Stone pelting on Om Shakti devotees: Three minors questioned

ಬೆಂಗಳೂರು,ಜ.5-ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲುತೂರಾಟ ಘಟನೆಗೆ ಸಂಬಂಧಿಸಿದಂತೆ ಮೂವರು ಅಪ್ರಾಪ್ತರನ್ನು ಜೆಜೆ ನಗರ ಠಾಣೆ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.ಈ ಘಟನೆ ಹಿಂದೆ ಯಾರ್ಯಾರಿದ್ದಾರೆ, ಯಾರಾದರೂ ಇವರಿಗೆ ಪ್ರಚೋದನೆ ನೀಡಿದ್ದಾರೆಯೇ ಎಂಬ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣವಿದ್ದು, ಬಿಗಿ ಪೊಲೀಸ್‌‍ ಬಂದೋಬಸ್ತ್‌ ಮಾಡಲಾಗಿದೆ. ಅಲ್ಲದೇ ಹಿರಿಯ ಪೊಲೀಸ್‌‍ ಅಧಿಕಾರಿಗಳು ಮೊಕ್ಕಾಂ ಹೂಡಿದ್ದಾರೆ.ನಿನ್ನೆ ರಾತ್ರಿ 8 ಗಂಟೆ ಸುಮಾರಿನಲ್ಲಿ ವಿಎಸ್‌‍ ಗಾರ್ಡನ್‌ ಬಳಿಯ ಓಂ ಶಕ್ತಿ ದೇವಾಲಯದ ಬಳಿ ದೇವಿಯ ಮೆರವಣಿಗೆ ವೇಳೆ ಓಂ ಶಕ್ತಿ ಮಾಲಾಧಾರಿಗಳ ಮೇಲೆ ದುಷ್ಕರ್ಮಿಗಳಿಂದ ಕಲ್ಲು ತೂರಾಟವಾಗಿದೆ. ಇದರಿಂದ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕಲ್ಲು ತೂರಾಟದಿಂದ ಮೂವರು ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಜೆಜೆ ನಗರ ಠಾಣೆ ಪೊಲೀಸರು ಹಾಗೂ ಎಸಿಪಿ ಭರತ್‌ ರೆಡ್ಡಿ ಸೇರಿದಂತೆ ಹಿರಿಯ ಅಧಿಕಾರಿಗಳು ಆಗಮಿಸಿ ಪರಿಶೀಲಿಸಿ, ಪರಿಸ್ಥಿತಿಯನ್ನು ನಿಯಂತ್ರಣ ತಂದಿದ್ದಾರೆ.

ಘಟನೆಯಿಂದ ಓಂ ಶಕ್ತಿ ಮಾಲಾಧಾರಿಗಳು ಹಾಗೂ ಸ್ಥಳೀಯರು ಸ್ಥಳದಲ್ಲಿ ಪ್ರತಿಭಟನೆ ನಡೆಸಿ , ಕಲ್ಲು ತೂರಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದಾಗ ಪೊಲೀಸರು ಪ್ರತಿಭಟನಕಾರರ ಮನವೊಲಿಸಲು ಹರಸಹಾಸಪಟ್ಟರು.

ಘಟನಾ ಸ್ಥಳದ ಸುತ್ತಮುತ್ತಲಿನ ರಸ್ತೆಗಳಲ್ಲಿರುವ ಸಿಸಿ ಕ್ಯಾಮೆರಾಗಳನ್ನು ಪರಿಶೀಲಿಸಿ ಅದರಲ್ಲಿರುವ ದೃಶ್ಯಾವಳಿ ಆಧರಿಸಿ ಇದೀಗ ಮೂವರು ಅಪ್ರಾಪ್ತರನ್ನು ಪೊಲೀಸರು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ.

RELATED ARTICLES

Latest News