ಬೆಂಗಳೂರು, ಜು.29-ಕಾವೇರಿ ನದಿ ನೀರನ್ನು ತಮಿಳುನಾಡಿಗೆ ಬಿಡುವ ವಿಚಾರದಲ್ಲಿಬರಾಜ್ಯದ ರೈತರ ಹಿತಕ್ಕೆ ಧಕ್ಕೆ ಬಾರದಂತೆ ರಾಜ್ಯ ಸರ್ಕಾರ ನೋಡಿಕೊಳ್ಳಬೇಕು ಎಂದು ವಿಧಾನಪರಿಷತ್ ನ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕ ಟಿ.ಎ.ಶರವಣ ಸಲಹೆ ಮಾಡಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್ ನಂತೆ 15 ದಿನಗಳ ಕಾಲ ಸತತ ನೀರು ಹರಿಸಿ 4 ಟಿಎಂಸಿ ಕಾವೇರಿ ನೀರು ಹರಿಸಬೇಕೆಂದು ಕಾವೇರಿ ನದಿ ನೀರು ನಿಯಂತ್ರಣ ಸಮಿತಿ ನೀಡಿರುವ ಸೂಚನೆಯ ಬಗ್ಗೆ ರಾಜ್ಯ ಸರ್ಕಾರ ಜವಾಬ್ದಾರಿಯಿಂದ ವರ್ತಿಸಬೇಕು ಎಂದಿದ್ದಾರೆ.
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದು, ಕಾವೇರಿ ಕೊಳ್ಳದ ಜಲಾಶಯಗಳಲ್ಲಿ ನೀರಿನ ಕೊರತೆ ಎದುರಾಗಿದೆ. ನಾಲ್ಕು ಟಿಎಂಸಿ ನೀರು ಹರಿಯಬೇಕಾದರೆ ಕೆಆರ್ ಎಸ್ ಮತ್ತು ಕಬಿನಿಯಿಂದ ಕನಿಷ್ಠ 7 ಟಿಎಂಸಿ ನೀರು ಬಿಡಬೇಕಾಗಿದೆ. ಇಷ್ಟೊಂದು ಕಾವೇರಿ ನೀರನ್ನು ಹೇಗೆ ಬಿಡಲು ಸಾಧ್ಯ? ಎಂದು ಅವರು ಸರ್ಕಾರನ್ನು ಪ್ರಶ್ನಿಸಿದ್ದಾರೆ.
ರಾಜ್ಯದ ನೆಲ, ಜಲದ ಹಕ್ಕಿನ ವಿಚಾರ ಬಂದಾಗ ಜೆಡಿಎಸ್ ಯಾವುದೇ ಕಾರಣಕ್ಕೂ ರಾಜೀ ಮಾಡಿಕೊಳ್ಳುವುದಿಲ್ಲ. ರೈತರ ಹಿತಾಸಕ್ತಿ ಬಲಿ ಕೊಡುವ ಮಾತೇ ಇಲ್ಲ. ಜೆಡಿಎಸ್ ಯಾವತ್ತಿದ್ದರೂ ರಾಜ್ಯದ ಹಿತಾಸಕ್ತಿಯನ್ನು ಎತ್ತಿ ಹಿಡಿಯಲಿದೆ ಎಂದು ಅವರು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಕಾವೇರಿ ನದಿ ನೀರು ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಲು ಸರ್ಕಾರಕ್ಕೆ ಅವಕಾಶ ಇದ್ದು, ಅದನ್ನು ಪರಿಶೀಲಿಸಬೇಕು ಎಂದು ಅವರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ಕಾವೇರಿ ಜಲಾಶಯ ವ್ಯಾಪ್ತಿಯ ರೈತರ ಫಸಲಿಗೆ ಮೊದಲು ನೀರು ಹರಿಸಬೇಕು. ಈ ಬಗ್ಗೆ ಸರ್ಕಾರ ತುರ್ತು ಸರ್ವಪಕ್ಷದ ಸಭೆ ಕರೆದು ಚರ್ಚೆ ನಡೆಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.
