ಬೆಂಗಳೂರು, ಮಾ.11- ರಾಜ್ಯದ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತರು ಮತ್ತು ಸಹಾಯಕೀಯರ ಹುದ್ದೆಗಳನ್ನು 90 ದಿನಗಳ ಒಳಗಾಗಿ ಭರ್ತಿ ಮಾಡಲು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿಂದು ಪ್ರಶ್ನೋತ್ತರದ ಅವಧಿಯಲ್ಲಿ ಗುರ್ಮೆ ಸುರೇಶ್ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಬಡವರ ಮಕ್ಕಳು ಓದುವ ಅಂಗನವಾಡಿ ಕೇಂದ್ರಗಳಲ್ಲಿ ಉತ್ತಮ ವಾತಾವರಣ ಇರಬೇಕು ಎಂಬುದು ಸರ್ಕಾರದ ಬದ್ಧತೆ. ಈ ನಿಟ್ಟಿನಲ್ಲಿ ಎಲ್ಲಿಯೂ ಹುದ್ದೆಗಳನ್ನು ಖಾಲಿ ಬಿಡಲು ಅವಕಾಶ ನೀಡುತ್ತಿಲ್ಲ ಎಂದರು.
ತೆರವಾದ ಹುದ್ದೆಗಳಿಗೆ ಸ್ಥಳೀಯವಾಗಿಯೇ 12 ಜನ ಸದಸ್ಯರು ಇರುವ ಜಿಲ್ಲಾಧಿಕಾರಿಗಳ ನೇತೃತ್ವದ ಸಮಿತಿ ನೇಮಕಾತಿ ಪ್ರಕ್ರಿಯೆಗಳನ್ನು ಕೈಗೊಳ್ಳಲಿದೆ. 90 ದಿನಗಳಲ್ಲಿ ಅದು ಮುಗಿಯಬೇಕು ಎಂದು ಹೇಳಿದರು.
ಅಂಗನವಾಡಿ ಕಾರ್ಯಕರ್ತರು ಆಯಾ ಗ್ರಾಮಗಳಲ್ಲೇ ವಾಸವಿರಬೇಕು ಎಂಬುದನ್ನು ಕಡ್ಡಾಯವಾಗಿ ಜಾರಿಗೊಳಿಸುತ್ತಿರುವುದಾಗಿ ತಿಳಿಸಿದರು. ತೇರದಾಳ ಕ್ಷೇತ್ರದ ಶಾಸಕ ಸಿದ್ದು ಸವದಿ, ಉದ್ಯೋಗಿನಿ ಯೋಜನೆಯ ಬಗ್ಗೆ ಪ್ರಶ್ನೆ ಕೇಳಿದಾಗ ಉತ್ತರ ನೀಡಿದ ಸಚಿವರು, ಉದ್ಯೋಗಿನಿ ಯೋಜನೆಗೆ ಫಲಾನುಭವಿಗಳನ್ನು ಆಯ್ಕೆ ಮಾಡಲು ಶಾಸಕರ ನೇತೃತ್ವದಲ್ಲಿ ಸಮಿತಿಗಳಿರುತ್ತವೆ. ಶಾಸಕರು ಫಲಾನುಭವಿಗಳ ಆಯ್ಕೆ ಪಟ್ಟಿ ನೀಡುವಲ್ಲಿ ವಿಳಂಬ ಮಾಡುತ್ತಿದ್ದಾರೆ.
ಅನಂತರ ಅದನ್ನು ಬ್ಯಾಂಕುಗಳಿಗೆ ಕಳುಹಿಸಿದರೆ ಅಲ್ಲಿ ಎಂಟರಿಂದ ಒಂಬತ್ತು ತಿಂಗಳು ವಿಳಂಬವಾಗುತ್ತಿದೆ. ಸಿಬಿಲ್ ಸ್ಕೋರ್ ಆಧರಿಸಿ ಬ್ಯಾಂಕುಗಳು ಸಾಲ ನೀಡುವ ಪರಿಪಾಠ ಅನುಸರಿಸಿವೆ. ಗ್ರಾಮೀಣ ಭಾಗದಲ್ಲಿ ಮಹಿಳೆಯರಿಗೆ ಸಿಬಿಲ್ ಸ್ಕೋರ್ ಲೆಕ್ಕ ಹಾಕುವುದು ಕಷ್ಟ ಸಾಧ್ಯ ಗಳನ್ನು ಸರಳೀಕರಣ ಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು.
