ಬೆಂಗಳೂರು : ಸೇಫ್ಟಿ ಪಿನ್ ಬಳಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಆರೋಪಿಗಳನ್ನು ಕೆ.ಜಿ.ಹಳ್ಳಿ ಠಾಣೆ ಪೊಲೀಸರು ಬಂಧಿಸಿ 15 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಯ 12 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಬೊಮ್ಮನಹಳ್ಳಿಯ ರೂಪೇನ ಅಗ್ರಹಾರದ ಎನ್ಜಿಆರ್ ಲೇಔಟ್ ನಿವಾಸಿಗಳಾದ ಕಿಶೋರ್ ಅಲಿಯಾಸ್ ಮ್ಯಾನ್(23) ಮತ್ತು ಪ್ರವೀಣ್(22) ಬಂಧಿತ ಆರೋಪಿಗಳು.
ಆರೋಪಿಗಳ ಪೈಕಿ ಕಿಶೋರ್ ಈ ಹಿಂದೆ ಬೇರೆ ಬೇರೆ ಪೊಲೀಸ್ ಠಾಣೆಗಳಲ್ಲಿ ಬಂಧಿತನಾಗಿ ಜೈಲಿಗೆ ಹೋಗಿದ್ದಾಗ ಅಲ್ಲಿದ್ದ ಆರೋಪಿಯೊಬ್ಬ ದ್ವಿಚಕ್ರ ವಾಹನಗಳ ಹ್ಯಾಂಡ್ ಲ್ಯಾಕ್ ಮುರಿಯುವ ಬಗ್ಗೆ ಮಾಹಿತಿ ನೀಡಿದ್ದ. ಅದರಿಂದ ಪ್ರೇರಣೆಗೊಂಡು ಜೈಲಿನಿಂದ ಬಿಡುಗಡೆಯಾದ ನಂತರ ಸ್ನೇಹಿತ ಪ್ರವೀಣ್ ಜೊತೆ ಸೇರಿಕೊಂಡು ಮನೆಯ ಮುಂದೆ ನಿಲ್ಲಿಸಿದಂತಹ ದ್ವಿಚಕ್ರ ವಾಹನಗಳ ಹ್ಯಾಂಡ್ಲಾಕ್ ಮುರಿದು ಸೇಫ್ಟಿ ಪಿನ್ ಬಳಸಿ ಕಳವು ಮಾಡಿರುವುದು ವಿಚಾರಣೆಯಿಂದ ತಿಳಿದುಬಂದಿದೆ.
ಆರೋಪಿಗಳು ಕಳವು ಮಾಡಿದ ವಾಹನಗಳನ್ನು ಮಾರಾಟ ಮಾಡಿ ಅದರಿಂದ ಬಂದ ಹಣದಲ್ಲಿ ಮೋಜುಮಸ್ತಿ ಮಾಡುತ್ತಿದ್ದರು. ಕಳೆದ ಒಂದೆರಡು ವರ್ಷಗಳಿಂದ ವಿವಿಧ ಪ್ರದೇಶಗಳಾದ ಕೆಜಿಹಳ್ಳಿ, ಬಾಣಸವಾಡಿ, ಹೈಗ್ರೌಂಡ್, ಹಲಸೂರು, ಕೆಂಗೇರಿ, ವಿಲ್ಸನ್ ಗಾರ್ಡನ್ ಬ್ಯಾಟರಾಯನಪುರ, ಚಾಮರಾಜಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳವು ಮಾಡಿದ್ದ ಒಟ್ಟು 18 ದ್ವಿಚಕ್ರವಾಹನಗಳನ್ನು ವಶಪಡಿಸಿಕೊಂಡಿರುವ ಪೊಲೀಸರು ಒಟ್ಟು 18 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ. ಇನ್ಸ್ಪೆಕ್ಟರ್ ಸಂತೋಷ್ಕುಮಾರ್ ಅವರ ನೇತೃತ್ವದ ತಂಡ ಈ ಕಾರ್ಯಚರಣೆ ಕೈಗೊಳ್ಳುವಲ್ಲಿ ಯಶಸ್ವಿಯಾಗಿದೆ.
