ಉಕ್ರೇನ್‍ನಿಂದ ಬಂದ ವಿದ್ಯಾರ್ಥಿಗಳ ಭವಿಷ್ಯ ರೂಪಿಸುವುದು ಕೇಂದ್ರ ಸರ್ಕಾರದ ಕರ್ತವ್ಯ : ಎಚ್‍ಡಿಕೆ

Social Share

ಬೆಂಗಳೂರು, ಮಾ.7- ಯುದ್ಧ ಭೂಮಿಯಿಂದ ಜೀವ ಉಳಿಸಿ ಕೊಂಡು ಬಂದ ವಿದ್ಯಾರ್ಥಿಗಳ ಭವಿಷ್ಯವನ್ನು ಮತ್ತೆ ಕಟ್ಟಿಕೊಡುವುದು ಕೇಂದ್ರ ಸರಕಾರದ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕದಲ್ಲಿ 50-60 ವೈದ್ಯ ಕಾಲೇಜುಗಳಿವೆ. ಅಗತ್ಯಬಿದ್ದರೆ ಒಂದು ಪ್ರವೇಶ ಪರೀಕ್ಷೆ ನಡೆಸಿ ಇಷ್ಟೂ ವಿದ್ಯಾರ್ಥಿಗಳನ್ನು ದಾಖಲಿಸಿಕೊಳ್ಳಲಿ. ಪ್ರತಿ ಕಾಲೇಜೂ ತಲಾ 10 ಮಕ್ಕಳಿಗಾದರೂ ಉಚಿತ ಶಿಕ್ಷಣ ನೀಡಲಿಎಂಬ ಸಲಹೆ ಮಾಡಿದ್ದಾರೆ.
ಆಪರೇಷನ್ ಗಂಗಾ ಹೆಸರಿನಲ್ಲಿ ಕೇಂದ್ರ ಸರಕಾರ ಉಕ್ರೇನ್‍ನಿಂದ ವಿದ್ಯಾರ್ಥಿಗಳನ್ನು ಏರ್‍ಲಿಫ್ಟ್ ಮಾಡಿದೆ ಎಂಬುದೇನೋ ಸರಿ. ಆದರೆ, ಆ ವೈದ್ಯ ವಿದ್ಯಾರ್ಥಿಗಳ ಭವಿಷ್ಯವೇನು? ಮತ್ತೆ ಆ ದೇಶಕ್ಕೆ ಹೋಗಲು ಸಾಧ್ಯವಿಲ್ಲ. ಅಲ್ಲಿನ ಶಿಕ್ಷಣ ಸಂಸ್ಥೆ, ವಿವಿಗಳನ್ನೂ ರಷ್ಯಾ ಸೇನೆ ಧ್ವಂಸ ಮಾಡಿದೆ ಎಂದು ಮಾಧ್ಯಮಗಳೇ ತೋರಿಸುತ್ತಿವೆ ಎಂದು ಹೇಳಿದ್ದಾರೆ.
ಕರ್ನಾಟಕದ 800-1000 ಮಕ್ಕಳು ಸೇರಿ ಭಾರತದ 20,000ಕ್ಕೂ ಹೆಚ್ಚು ವೈದ್ಯ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ಇನ್ನೂ ಕೆಲವರು ಬರುವವರಿದ್ದಾರೆ. ಅವರೆಲ್ಲರ ಶೈಕ್ಷಣಿಕ ಭವಿಷ್ಯದ ಪ್ರಶ್ನೆ ಏನು? ಪೋಷಕರು ಸಾಲ ಮಾಡಿ ಮಕ್ಕಳನ್ನು ಉಕ್ರೇನ್ಗೆ ಕಳಿಸಿದ್ದರು. ಯುದ್ಧದಿಂದ ಅವರ ಶಿಕ್ಷಣ ಅತಂತ್ರವಾಗಿದೆ.
2,65,720 ಕೋಟಿ ರೂ.ಗಳಷ್ಟು ಬಜೆಟ್ ಗಾತ್ರದ ಕರ್ನಾಟಕಕ್ಕೆ 50ರಿಂದ 100 ಕೋಟಿ ರೂ. ಖರ್ಚು ಮಾಡುವುದು ಕಷ್ಟವೇ? ಈ ಮೊತ್ತದಲ್ಲಿ ಅರ್ಧಪಾಲನ್ನು ಕೇಂದ್ರ ಸರಕಾರವೇ ನೀಡಲಿ. ನೀಟ್ ಮೂಲಕ ಶೇ.50ರಷ್ಟು ಸೀಟುಗಳನ್ನು ಕೇಂದ್ರ ಇಟ್ಟುಕೊಳ್ಳುವುದಿಲ್ಲವೇ. ಎರಡೂ ಸರಕಾರಗಳು ಅಂತಃಕರಣದಿಂದ ಆಲೋಚಿಸಲಿ ಎನ್ನುವುದು ನನ್ನ ಅಭಿಪ್ರಾಯ ಎಂದಿದ್ದಾರೆ.
ವೈದ್ಯೋ ನಾರಾಯಣೋ ಹರಿ ಎಂದು ಹೇಳುತ್ತೇವೆ. ಇಷ್ಟು ವಿದ್ಯಾರ್ಥಿಗಳು ವೈದ್ಯರಾದರೆ ಎಷ್ಟು ಜನರ ಜೀವ ಉಳಿಸಬಲ್ಲರು, ರಾಜ್ಯಕ್ಕೆಷ್ಟು ಸೇವೆ ಸಲ್ಲಿಸಬಹುದು. ಹಣದ ಮೂಲಕ ಶಿಕ್ಷಣಕ್ಕೆ ಬೆಲೆಕಟ್ಟಿ ಮಕ್ಕಳ ಕನಸುಗಳ ಜತೆ ವ್ಯಾಪಾರೀಕರಣ ಮಾಡುವುದು ಬೇಡ. ಕೇಂದ್ರ-ರಾಜ್ಯ ಸರಕಾರಗಳು ಕೂಡಲೇ ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

Articles You Might Like

Share This Article