Saturday, October 5, 2024
Homeರಾಜಕೀಯ | Politicsಇಡಿ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ : ಸಚಿವ ಎಚ್.ಕೆ.ಪಾಟೀಲ್

ಇಡಿ ವಿರುದ್ಧ ಕಾನೂನು ಹೋರಾಟ ನಡೆಸುತ್ತೇವೆ : ಸಚಿವ ಎಚ್.ಕೆ.ಪಾಟೀಲ್

We will fight legally against ED: Minister HK Patil

ಬೆಂಗಳೂರು,ಅ.1– ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಜಾರಿ ನಿರ್ದೇಶನಾಲಯ ಪ್ರಕರಣ ದಾಖಲಿಸುವುದರ ವಿರುದ್ಧ ಕಾನೂನಾತ್ಮಕ ಹೋರಾಟ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜನಪರವಾದ ಯೋಜನೆಗಳನ್ನು ರೂಪಿಸಿದರು. ಪಂಚಖಾತ್ರಿ ಸೇರಿದಂತೆ ಹಲವಾರು ಯೋಜನೆಗಳು ಜನಮನ್ನಣೆ ಗಳಿಸಿವೆ. ಬಿಜೆಪಿಯವರಿಗೆ ಇದನ್ನು ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮುಡಾ ಪ್ರಕರಣದಲ್ಲಿ ಮನಿ ಲ್ಯಾಂಡ್ರಿಂಗ್ ಎಲ್ಲಿದೆ ಎಂದು ಪ್ರಶ್ನಿಸಿದರು.

ಕಾನೂನನ್ನು ಮನಸ್ಸಿಗೆ ಬಂದಂತೆ ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಈ ಮೊದಲು ರಾಜಭವನವನ್ನು ದುರುಪಯೋಗಪಡಿಸಿಕೊಂಡಿದ್ದರು. ಈಗ ಇಡಿಯನ್ನು ಬಳಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಸಿದ್ದರಾಮಯ್ಯ ಅವರ ವಿರುದ್ಧ ಇಡಿ ಪ್ರಕರಣ ದಾಖಲಾದ ಬಳಿಕ ತಾವು ಅವರನ್ನು ಭೇಟಿ ಮಾಡಿಲ್ಲ. ಇಂದು ಮಧ್ಯಾಹ್ನ ಭೇಟಿ ಮಾಡುತ್ತೇನೆ. ಇಂತಹ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಸಂವಿಧಾನದಲ್ಲಿ ಅವಕಾಶವಿದೆ. ನಾವು ಅದನ್ನೇ ಬಳಸಿಕೊಳ್ಳುತ್ತೇವೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಬೆಂಬಲ ವ್ಯಕ್ತಪಡಿಸಿದೆ. ಹೀಗಾಗಿ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ. ಬಿಜೆಪಿಯವರು ರಾಜಕೀಯ ದ್ವೇಷಕ್ಕಾಗಿ ಬಡವರ ಪರ ಕಾರ್ಯಕ್ರಮಗಳನ್ನು ದಿಕ್ಕು ತಪ್ಪಿಸಲು ಹೇಗೆಲ್ಲಾ ನಡೆದುಕೊಳ್ಳುತ್ತಿದ್ದಾರೆ ಎಂಬುದನ್ನು ಜನ ಗಮನಿಸುತ್ತಿದ್ದಾರೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರ ರಾಜಕೀಯ ಹತಾಶೆಯಿಂದ ತೀವ್ರ ಅಸಹನೀಯ ಸ್ಥಿತಿಗೆ ಇಳಿದಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.

RELATED ARTICLES

Latest News