Saturday, July 27, 2024
Homeರಾಜಕೀಯಸರ್ಕಾರವನ್ನು ನಾವು ಅಸ್ಥಿರಗೊಳಿಸೊ ಪ್ರಯತ್ನ ಮಾಡಲ್ಲ, ಅದಾಗೆ ಬಿದ್ದರೆ ನಾವೇನ್ ಮಾಡೋಕಾಗುತ್ತೆ : ವಿಜಯೇಂದ್ರ

ಸರ್ಕಾರವನ್ನು ನಾವು ಅಸ್ಥಿರಗೊಳಿಸೊ ಪ್ರಯತ್ನ ಮಾಡಲ್ಲ, ಅದಾಗೆ ಬಿದ್ದರೆ ನಾವೇನ್ ಮಾಡೋಕಾಗುತ್ತೆ : ವಿಜಯೇಂದ್ರ

ಬೆಂಗಳೂರು, ಮೇ 13- ಯಾವುದೇ ಕಾರಣಕ್ಕೂ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದಾಗುವುದಿಲ್ಲ. ಒಂದು ವೇಳೆ ತನ್ನಿಂದ ತಾನೇ ಬಿದ್ದು ಹೋದರೆ ನಾವೇನು ಮಾಡಲು ಸಾಧ್ಯ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಪ್ರತಿಕ್ರಿಯಿಸಿದ್ದಾರೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಒಂದು ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಜವಾಬ್ದಾರಿಯುತವಾಗಿ ಮಾಧ್ಯಮದವರ ಮುಂದೆ ಹೇಳಿಕೆ ನೀಡುತ್ತಿದ್ದೇನೆ. ಸರ್ಕಾರ ಅಸ್ಥಿರಗೊಳಿಸುವ ಪ್ರಯತ್ನ ನಮ್ಮಿಂದ ನಡೆಯುವುದಿಲ್ಲ ಎಂದು ವದಂತಿಗಳಿಗೆ ತೆರೆ ಎಳೆಯುವ ಪ್ರಯತ್ನ ಮಾಡಿದರು.

ನಾವು ವಿರೋಧಪಕ್ಷದಲ್ಲಿ ಕುಳಿತುಕೊಂಡು ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದೇವೆ. ಪೂರ್ಣ ಬಹುಮತ ಹೊಂದಿರುವ ಕಾಂಗ್ರೆಸ್‌ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭದ ಮಾತಲ್ಲ. ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರು ಯಾವ ಅರ್ಥದಲ್ಲಿ ಹೇಳಿಕೆ ಕೊಟ್ಟಿದ್ದಾರೋ ನನಗೆ ಗೊತ್ತಿಲ್ಲ. ಇದಕ್ಕೆ ಅವರೇ ಉತ್ತರ ಕೊಡಲಿ ಎಂದರು.

ನಮ್ಮ ಮುಂದೆ ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಲಿದೆ ಎಂಬ ಕಾತುರವಿದೆ. ನಾವು ಅದರ ಬಗ್ಗೆ ಹೆಚ್ಚಿನ ಗಮನ ಹರಿಸಿದ್ದೇವೆ. ಒಂದು ಬಹುಮತ ಇರುವ ಸರ್ಕಾರವನ್ನು ಅಸ್ಥಿರಗೊಳಿಸುವುದು ಅಷ್ಟು ಸುಲಭವಲ್ಲ. ಲೋಕಸಭಾ ಚುನಾವಣೆ ನಂತರ ನಡೆಯುವ ರಾಜಕೀಯ ಬೆಳವಣಿಗೆಗಳ ಬಗ್ಗೆ ನಾವು ಈಗಲೇ ಭವಿಷ್ಯ ಹೇಳಲು ಸಾಧ್ಯವಿಲ್ಲ ಎಂದು ವಿಜಯೇಂದ್ರ ಸ್ಪಷ್ಟಪಡಿಸಿದರು.

ಲೋಕಸಭಾ ಚುನಾವಣೆಯಲ್ಲಿ ತಮಗೆ ಉತ್ತಮವಾದ ಫಲಿತಾಂಶ ಬರಲಿದೆ. ನಮ್ಮ ನಿರೀಕ್ಷೆಗೂ ಮೀರಿ ಮತದಾನವಾಗಿದೆ. ಪ್ರಧಾನಿ ನರೇಂದ್ರ ಮೋದಿಯವರ ಕಾರಣಕ್ಕಾಗಿಯೇ ಹೆಚ್ಚಿನ ಸಂಖ್ಯೆಯಲ್ಲಿ ಮತದಾರರು ಮತದಾನ ಮಾಡಿದ್ದಾರೆ. ಎಲ್ಲಾ ರಾಜಕೀಯ ಸಮೀಕ್ಷೆಗಳನ್ನು ತಲೆಕೆಳಗೆ ಮಾಡಿ ಬಿಜೆಪಿ, ಜೆಡಿಎಸ್‌ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ ಎಂಬ ವಿಶ್ವಾಸವನ್ನು ವಿಜಯೇಂದ್ರ ವ್ಯಕ್ತಪಡಿಸಿದರು.

RELATED ARTICLES

Latest News